ಹನೂರು: ಹಿರಿಯ ರಾಜಕೀಯ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ನೂತನ ಕಾಂಗ್ರೆಸ್ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ಅಜ್ಜಿಪುರ ಹಾಗೂ ಬಸಪ್ಪನದೊಡ್ಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರುಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಮಾಜಿ ತಾ.ಪಂ.ಅಧ್ಯಕ್ಷ ಮುರುಡೇಶ್ವರಸ್ವಾಮಿ ಮಾತನಾಡಿ, ಈ ನಾಡು ದೇಶ ಕಂಡ ಅಪರೂಪದ ರಾಜಕೀಯ ಮುತ್ಸದಿ, ಕರ್ನಾಟಕ ಸುಪುತ್ರ ಮಲ್ಲಿಕಾರ್ಜುನ್ ಖರ್ಗೆ ಅವರು ನೂತನ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಮ್ಮೆಲ್ಲರ ಸೌಭಾಗ್ಯ. 9 ಬಾರಿ ಶಾಸಕರಾಗಿ ಹಾಗೂ 2 ಬಾರಿ ಸಂಸದರಾಗಿ ಆಯ್ಕೆಯಾಗಿ ರಾಜ್ಯ ಮತ್ತು ಕೇಂದ್ರದಲ್ಲಿ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಎಂಟು ಸಾವಿರ ಮತಗಳನ್ನು ಪಡೆಯುವ ಮೂಲಕ 37ನೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.
ಇದು ಅವರ ಪಕ್ಷ ನಿಷ್ಠೆ ಹಾಗೂ ಪ್ರಾಮಾಣಿಕತೆ ಸಂದ ಗೌರವವಾಗಿದೆ. ಕರ್ನಾಟಕದಲ್ಲಿ ನಿಜಲಿಂಗಪ್ಪ ಅವರ ನಂತರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಗಾದಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೊರಕಿರುವುದು ಸಂತಸದ ವಿಚಾರ. ಅವರ ನಾಯಕತ್ವದಲ್ಲಿ ರಾಜ್ಯ, ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಸದೃಢವಾಗಿ ಬೆಳೆಯುತ್ತದೆ ಎಂಬ ವಿಶ್ವಾಸವಿದೆ. ದೇವರು ಅವರಿಗೆ ಇನ್ನೂ ಹೆಚ್ಚಿನ ಆಯಸ್ಸು ಆರೋಗ್ಯ ನೀಡಿ ಕಾಪಾಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿ.ನಾಗರಾಜು, ಕಾಳೇಗೌಡ, ಮುನಿಗೌಡ, ವಿ.ಕೆ.ರಮೇಶ್, ಪಚ್ಚೇಗೌಡ ಮಾದೇವು, ಗ್ರಾ.ಪಂ. ಸದಸ್ಯ ಭೈರಾಜ್, ಲೋಕೇಶ್, ಚೆನ್ನಮಾದೇಗೌಡ, ಶಿವಮೂರ್ತಿ ಇನ್ನಿತರರಿದ್ದರು.