Mysore
30
overcast clouds

Social Media

ಮಂಗಳವಾರ, 16 ಜೂನ್ 2026
Light
Dark

FIR ರದ್ದು ಕೋರಿ ನಟ ಚೇತನ್‌ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ‘ಕಾಂತಾರ ಚಲನಚಿತ್ರದಲ್ಲಿನ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ಹೇಳಿರುವುದು ನಿಜವಲ್ಲ’ ಎಂಬ ನಟ ಚೇತನ್ ಟ್ವೀಟ್‌ ಆಕ್ಷೇಪಿಸಿ ದಾಖಲಿಸಲಾಗಿರುವ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

‘ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಚೇತನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಚೇತನ್‌, ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದರಿಂದ ಯಾರಿಗೂ ತೊಂದರೆಯಾಗಿಲ್ಲ ಅಥವಾ ಸಮಾಜದಲ್ಲಿ ಅಶಾಂತಿಯೂ ಉಂಟಾಗಿಲ್ಲ. ಆದರೂ, ಅವರ ವಿರುದ್ಧ ಎಫ್‌ಐಆರ್ ದಾಖಲಿಸ‌ಲಾಗಿದ್ದು, ಅದನ್ನು ರದ್ದುಗೊಳಿಸಬೇಕು’ ಎಂದು ಕೋರಿದರು.

ಇದಕ್ಕೆ ಬಲವಾದ ಆಕ್ಷೇಪವ್ಯಕ್ತಪಡಿಸಿದ ಸರ್ಕಾರಿ ವಕೀಲರು, ‘ಅರ್ಜಿದಾರರು ಉದ್ದೇಶಪೂರ್ವಕ ವಾಗಿಯೇ ಹೇಳಿಕೆ ನೀಡಿ ವಿವಾದ ಎಬ್ಬಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ಈ ಹಂತದಲ್ಲಿ ಎಫ್‌ಐಆರ್ ರದ್ದುಗೊಳಿಸಬಾರದು. ಅರ್ಜಿ ವಜಾಗೊಳಿಸಿ ತನಿಖೆ ಎದುರಿಸುವಂತೆ ಆದೇಶಿಸಬೇಕು’ ಎಂದು ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಪ್ರಕರಣ ಇನ್ನೂ ತನಿಖಾ ಹಂತದಲ್ಲಿ ಇರುವಾಗ ಕೋರ್ಟ್ ಹಸ್ತಕ್ಷೇಪ ಮಾಡಬಾರದು’ ಎಂಬ ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಚೇತನ್‌ ಅರ್ಜಿಯನ್ನು ತಿರಸ್ಕರಿಸಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!