Mysore
18
few clouds

Social Media

ಮಂಗಳವಾರ, 27 ಜನವರಿ 2026
Light
Dark

ಹಂದಿ ಹಾವಳಿ ತಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ

ಮದ್ದೂರು: ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಇದರ ತಡೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು.
ಪಟ್ಟಣದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಮುಖಂಡರು, ಗ್ರಾಮಗಳಲ್ಲಿ ಹೆಚ್ಚಾಗಿರುವ ಮುಳ್ಳು ಹಂದಿ ಹಾಗೂ ಕಾಡು ಹಂದಿಗಳ ಹಾವಳಿಯಿಂದಾಗಿ ರೈತರು ಅನೇಕ ರೀತಿಯಲ್ಲಿ ಕಷ್ಟ ನಷ್ಟಗಳಿಗೆ ಸಿಲುಕಿದ್ದಾರೆ.
ಜಮೀನುಗಳಲ್ಲಿ ತೆಂಗಿನ ಸಸಿ ಕಿತ್ತುಹಾಕಿ ರೈತರ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿವೆ. ಹಂದಿಗಳ ಹಾವಳಿ ತಡೆಗೆ ಗ್ರಾಮಸ್ಥರು ಹಾಗೂ ಪ್ರಗತಿಪರ ಸಂಘಟನೆಗಳು ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆದ್ದರಿಂದ ರೈತರಿಗೆ ಕೂಡಲೇ ಬೆಳೆ ನಷ್ಟ ಪರಿಹಾರ ನೀಡಬೇಕು. ಹಂದಿಗಳ ಹಾವಳಿ ತಡೆಗೆ ಗಂಭೀರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ತೆಂಗುಬೆಳೆಗಾರರ ಸಂಘ, ರಾಜ್ಯ ರೈತಸಂಘ, ಗ್ರಾಪಂ ಸದಸ್ಯರ ಒಕ್ಕೂಟ, ಹಾಲು ಉತ್ಪಾದಕರ ಹೋರಾಟ ಸಮಿತಿ, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ, ಕರವೇ ಸಂಘಟನೆಗಳು ಸಾಥ್ ನೀಡಿದ್ದವು. ಮುಖಂಡರಾದ ನ.ಲಿ.ಕೃಷ್ಣ, ಚನ್ನಸಂದ್ರ ಲಕ್ಷ್ಮಣ್, ಕರವೇ ಅಶೋಕ್ ಕುಮಾರ್, ಶಿವಪ್ಪ, ರಾಜು, ಬೋರಯ್ಯ, ರಮೇಶ್, ಇಂದ್ರ ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಭಾಗಿಯಾಗಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!