ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಹ್ಲಾದ್ ಮೋದಿ ಅವರು ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ಆಗಮಿಸುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ರಾಮದಾಸ್, ಜೆಎಸ್ ಎಸ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎಸ್ ಪಿ ಮಂಜುನಾಥ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.





