ಬೆಂಗಳೂರು : ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಶುಕ್ರವಾರ ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ಮೊದಲು ಕಾಂಗ್ರೆಸ್ನಲ್ಲಿದ್ದ ವಿಶ್ವನಾಥ್ ಕೆಲ ವರ್ಷಗಳ ಹಿಂದೆ ಜೆಡಿಎಸ್ ಸೇರ್ಪಡೆಯಾಗಿದ್ದರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಡೆದ ಆಪರೇಷನ್ ಕಮಲದ ವೇಳೆ ಮುಂಬೈಗೆ ತೆರಳಿದ ಪಕ್ಷಾಂತರಿ ಶಾಸಕರ ತಂಡದ ನೇತೃತ್ವ ವಹಿಸಿದ್ದರು.
ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಲು ವಿಶ್ವನಾಥ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಉಪಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಅವರ ಸೋಲು ಕಂಡಿದ್ದರಿಂದ ಸಚಿವರಾಗಲು ಸಾಧ್ಯವಾಗಿಲ್ಲ. ವಿಧಾನ ಪರಿಷತ್ ಸದಸ್ಯರಾಗಿರುವ ವಿಶ್ವನಾಥ್ ಹಲವು ಬಾರಿ ತಮ್ಮ ಪಕ್ಷದ ಸರ್ಕಾರದ ವಿರುದ್ಧವೇ ಟೀಕಿಸಿದ್ದರು.
ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಬಿಜೆಪಿಗೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟ ಪಡಿಸಿದ್ದರು. ಆದರೆ ಕಾಂಗ್ರೆಸ್ ಸೇರುತ್ತಾರೆ ಎಂಬ ವದ್ಧಂತಿಗಳಿಗೆ ತೆರೆ ಎಳೆದಿದ್ದರು. ಸದ್ಯಕ್ಕೆ ತಾವು ಕಾಂಗ್ರೆಸ್ ಸೇರುವುದಿಲ್ಲ ಎಂದ್ದಿರು.
ಆದರೆ ವಿಧಾನಸಭೆ ಚುನಾವಣೆ ಕಾಲದಲ್ಲಿ ವಿಶ್ವನಾಥ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂಬ ವದ್ಧಂತಿಗಳಿವೆ. ವಿಧಾನ ಪರಿಷತ್ ಸದಸ್ಯತ್ವ ಅವ ಮುಗಿದ ಬಳಿಕ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಪಕ್ಷದ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈಗಾಗಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವಿಶ್ವನಾಥ್ ಭೇಟಿಯಾಗಿದ್ದರು.
ಇಂದು ಮೈಸೂರು ಪ್ರವಾಸದಲ್ಲಿದ್ದ ಡಿ.ಕೆ.ಶಿವಕುಮಾರ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮೂಲಗಳ ಪ್ರಕಾರ ಹಳೆಯ ಮೈಸೂರು ಭಾಗದಲ್ಲಿನ ಕ್ಷೇತ್ರವೊಂದಕ್ಕೆ ವಿಶ್ವನಾಥ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದೆ.