ನವದೆಹಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು(ಏ.12) ಭೇಟಿ ಮಾಡಿದರು. ಈ ಸಂದರ್ಭ ರಾಹುಲ್ ಗಾಂಧಿ ಅವರೂ ಕೂಡ ಹಾಜರಿದ್ದರು.
ದೆಹಲಿಯ ಖರ್ಗೆ ನಿವಾಸದಲ್ಲಿ ಸಭೆ ನಡೆಸಿದ ನಾಯಕರು 2024ರ ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಕುರಿತು ಚರ್ಚೆ ನಡೆಸಿದ್ದಾರೆ.
ಬಿಜೆಪಿಯನ್ನು ಎದುರಿಸಲು ಸಮಾನ ಮನಸ್ಕ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸಲು ಖರ್ಗೆ ಅವರು ಇತ್ತೀಚೆಗೆ ವಿರೋಧ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಮುಂದಿನ ದಿನಗಳಲ್ಲಿ ಉಳಿದ ವಿರೋಧ ಪಕ್ಷಗಳ ನಾಯಕರ ಬೆಂಬಲವನ್ನು ಕೋರುವ ಸಾಧ್ಯತೆಯಿದೆ.





