Mysore
23
overcast clouds

Social Media

ಶನಿವಾರ, 20 ಜೂನ್ 2026
Light
Dark

ಬಿಲ್ಕಿಸ್‌ ಬಾನು ಪ್ರಕರಣ | ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಕಾರಣವೇನು: ಕಾಂಗ್ರೆಸ್

ನವದೆಹಲಿ: ಬಿಲ್ಕಿಸ್‌ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿತ್ತು ಎಂಬುದು ಬಹಿರಂಗವಾಗಬೇಕು ಎಂದು ಕಾಂಗ್ರೆಸ್‌ ಬುಧವಾರ ಆಗ್ರಹಿಸಿದೆ.

ಈ ಪ್ರಕರಣದ ಅಪರಾಧಿಗಳನ್ನು ಅವಧಿಗೂ ಮುನ್ನವೇ ಬಿಡುಗಡೆ ಮಾಡಿದ್ದರ ಕುರಿತು ಗುಜರಾತ್‌ ಸರ್ಕಾರವನ್ನು ಸುಪ್ರೀಂಕೋರ್ಟ್‌ ಪ್ರಶ್ನಿಸಿತ್ತು. ಇಂಥ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು.

ಇದರ ಬೆನ್ನಲ್ಲೇ, ಕಾಂಗ್ರೆಸ್‌ ಪಕ್ಷ ಗುಜರಾತ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನೇತ್, ‘ಇದು ಸಾಮಾನ್ಯ ಅಪರಾಧ ಕೃತ್ಯವಲ್ಲ. ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಮಗುವನ್ನು ಕೊಲ್ಲಲಾಗಿತ್ತು. ಆಕೆಯನ್ನು ಎಂಥ ಸಂಕಷ್ಟಕ್ಕೆ ದೂಡಲಾಗಿತ್ತು ಎಂಬ ಕಲ್ಪನೆ ನಿಮಗಿದೆಯೇ’ ಎಂದು ಪ್ರಶ್ನಿಸಿದರು.

‘ಆದಾಗ್ಯೂ, ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದ ಕಡತಗಳ ಮೇಲೆ ತಮಗೆ ವಿಶೇಷ ಅಧಿಕಾರ ಇದೆ ಎಂಬುದಾಗಿ ಕೇಂದ್ರ ಹಾಗೂ ಗುಜರಾತ್‌ ಸರ್ಕಾರಗಳು ಹೇಳುತ್ತಿವೆ’ ಎಂದು ಟೀಕಿಸಿದರು.

‘ಅದು ಎಂಥ ವಿಶೇಷ ಅಧಿಕಾರ? ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವೆ’ ಎಂದು ಪ್ರಶ್ನಿಸಿದ ಅವರು, ‘ಇದು ಮಹಿಳೆಯೊಬ್ಬಳ ಹಕ್ಕಿಗೆ ಸಂಬಂಧಿಸಿದ್ದು’ ಎಂದರು.‌

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!