Mysore
20
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆ

ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಅಷ್ಟೇ ಅಲ್ಲದೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪುತ್ತೂರು, ಕುಂದಾಪುರ, ಮಾಣಿ, ಕಾರ್ಕಳ, ಭಾಗಮಂಡಲ, ಕೋಟ, ಪಣಂಬೂರು, ಹುಣಸೂರು, ತುಮಕೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು ಸಂಜೆ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈಗಾಗಲೇ ಮೋಕಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಕೆಲವೆಡೆ ಬಿರುಗಾಳಿ ಸಹಿತ ಮಳೆ ಸುರಿದ ಹಿನ್ನೆಲೆ ಬೆಟ್ಟಗುಡ್ಡಗಳು ಕುಸಿದಿವೆ. ಇನ್ನು ಕೆಲವೆಡೆ ಕೃಷಿ ಭೂಮಿಗಳು ಜಲಾವೃತ ಆದ ಘಟನೆಗಳು ನಡೆದಿವೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರಂಭವಾಗಿದೆ. ಅಲ್ಲದೆ ಹವಾಮಾನ ಇಲಾಖೆ ಕರಾವಳಿ ಭಾಗದ ಮೀನುಗಾರರಿಗೆ ಕೆಲವು ಎಚ್ಚರಿಕೆ ಸಂದೇಶವನ್ನು ನೀಡಿದೆ.

ಇನ್ನು ಮೋಕಾ ಚಂಡಮಾರುತ ಬಾಂಗ್ಲಾದೇಶ-ಮ್ಯಾನ್ಮಾರ್‌ ಗಡಿ ಭಾಗದಲ್ಲಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ. ಅಲ್ಲದೆ ಪಶ್ಚಿಮ ಬಂಗಾಳ, ಒಡಿಶಾ, ಬಾಂಗ್ಲಾ-ಮ್ಯಾನ್ಮಾರ್‌ನ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆರಂಭವಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ಸಂದೇಶವನ್ನು ಸಹ ನೀಡಿದೆ.

ಚಂಡಮಾರುತವು ಪ್ರಸ್ತುತ ಕಾಕ್ಸ್ ಬಜಾರ್‌ನ ದಕ್ಷಿಣ-ನೈಋತ್ಯಕ್ಕೆ 700 ಕಿಲೋ ಮೀಟರ್‌ ದೂರದಲ್ಲಿ ಅಪ್ಪಳಿಸಲಿದೆ. ಕಳೆದ 6 ಗಂಟೆಗಳಲ್ಲಿ ಈ ಚಂಡಮಾರುತವು ನಿಧಾನವಾಗಿ ಈಶಾನ್ಯ ಕಡೆಗೆ 10 ಕಿಲೋ ಮೀಟರ್‌ ವೇಗದಲ್ಲಿ ಚಲಿಸುತ್ತಿದೆ. ಅಲ್ಲದೆ ಸೋಮವಾರ ಮಧ್ಯಾಹ್ನದ ವೇಳೆಗೆ ಕಾಕ್ಸ್ ಬಜಾರ್ (ಬಾಂಗ್ಲಾದೇಶ) ಮತ್ತು ಮ್ಯಾನ್ಮಾರ್ ನಡುವೆ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!