ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು, ಪ್ರಕ್ರಿಯೆ ಆರಂಭವಾಗಿದೆ. ಹಂಗಾಮಿ ಸ್ವೀಕರ್ ಆಗಿರುವ ಆರ್.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಆರ್.ವಿ.ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿದ್ದು, ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದ್ದಾರೆ. ಕನಕಪುರ ಕ್ಷೇತ್ರದ ಶಾಸಕ, ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ್, ದೇವನಹಳ್ಳಿ ಶಾಸಕ ಕೆ.ಎಚ್.ಮುನಿಯಪ್ಪ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಡಿಕೆಶಿ ಹೆಸರಿನಲ್ಲಿ ಪ್ರಮಾಣವಚನ : ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದರು. ಇದಕ್ಕೆ ಸದನದಲ್ಲಿ ಇತರೆ ಸದನದ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಕೂಡಲೆ ಗೊಂದಲ ಬಗೆಹರಿಸಿದ ಸ್ಪೀಕರ್, ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.
ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ, ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ್ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
12 ವರ್ಷದ ನಂತರ ಮತ್ತೆ ವಿಧಾನಸೌಧಕ್ಕೆ ಹೆಜ್ಜೆ ಇಡುತ್ತಿದ್ದೇನೆ : ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, 12 ವರ್ಷದ ನಂತರ ಮತ್ತೆ ವಿಧಾನಸೌಧಕ್ಕೆ ಹೆಜ್ಜೆ ಇಡುತ್ತಿದ್ದೇನೆ. ನಮ್ಮ ಪಕ್ಷಕ್ಕೆ ಜನರು ಆಶೀರ್ವಾದ ಮಾಡಿದ್ದರಿಂದ ನಾನು ಚುನಾವಣೆಯಲ್ಲಿ ಗೆದ್ದು ವಿಧಾನಸೌಧ ಪ್ರವೇಶ ಮಾಡಿದ್ದೇನೆ. ಕರ್ನಾಟಕದ ಜನರ ಒಳಿತಿಗಾಗಿ ಕಲ್ಯಾಣ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಸದ್ಯ ನಾನೊಬ್ಬನೇ ಗೆದ್ದು ವಿಧಾನಸೌಧಕ್ಕೆ ಹೆಜ್ಜೆ ಇಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಹುಮತದಿಂದ ವಿಧಾನಸೌಧಕ್ಕೆ ಬರುತ್ತೇನೆ. ಜನಪರವಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಬೆಂಬಲ ಇರುತ್ತದೆ ಎಂದು ಹೇಳಿದರು.





