Mysore
28
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಕಾಂಗ್ರೆಸ್‌ ಕಮಿಷನ್‌ ಕೇಳಿದರೆ ನಾನೇ ಬಹಿರಂಗ ಮಾಡುತ್ತೇನೆ: ಕೆಂಪಣ್ಣ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗಿದೆ. ಇದುವರೆಗೂ ನಮಗೆ ಕಮಿಷನ್ ಕೇಳಿಲ್ಲ. ಒಂದು ವೇಳೆ ನನಗೆ ಕೇಳಿದರೆ ನಾನೇ ಬಹಿರಂಗ ಮಾಡುತ್ತೇನೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಶೇ.40ರಷ್ಟು ಕಮಿಷನ್ ವ್ಯವಹಾರ ನಡೆಯುತ್ತಿತ್ತು. ಆ ಬಗ್ಗೆ ಪ್ರಸ್ತಾಪ ಮಾಡಿದ್ದೆವು. ಮೂರು ವರ್ಷಗಳ ಕಾಲ ಬಿಜೆಪಿ ಸರ್ಕಾರದಲ್ಲಿ ಹೋರಾಟ ನಡೆಸಲಾಗಿತ್ತು. ಈಗ ತಮ್ಮನ್ನು ಪ್ರಶ್ನೆ ಮಾಡುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕಾರದಲ್ಲಿದ್ದಾಗ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

ಹಲವು ಬಾರಿ ತನಿಖೆಗೆ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಈ ಸರ್ಕಾರ ಬಂದು ಇನ್ನೂ ತಿಂಗಳಾಗಿದೆ. ಶೇ. 40 ರಷ್ಟು ಕಮಿಷನ್ ಕೇಳುತ್ತದೆಯೋ ಇಲ್ಲವೋ ಗೊತ್ತಿಲ್ಲ. ಒಂದು ವೇಳೆ ಕೇಳಿದರೆ ನಾನೇ ಬಹಿರಂಗ ಮಾಡುತ್ತೇನೆ. ಅನಗತ್ಯವಾಗಿ ಆರೋಪ ಮಾಡಲು ಹೋಗುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಮೃದು ಧೋರಣೆ ಅನುಸರಿಸುವುದಿಲ್ಲ ಎಂದರು.

ಮುಖ್ಯಮಂತ್ರಿಯೊಂದಿಗಿನ ಸಭೆಯಲ್ಲಿ ಸರ್ಕಾರಕ್ಕೆ ಏನು ಹೇಳಬೇಕೊ ಅದನ್ನು ಹೇಳಿದ್ದೇವೆ. ಗುತ್ತಿಗೆದಾರರಿಗೆ ಸರ್ಕಾರದಿಂದ 20 ಸಾವಿರ ಕೋಟಿ ರೂ.ಗಳ ಬಿಲ್ ಪಾವತಿ ಆಗಬೇಕಿದೆ. ಅದನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಇದರ ಹೊರತಾಗಿ ಶೇ.40ರಷ್ಟು ಕಮಿಷನ್ ಸೇರಿದಂತೆ ಬೇರಾವ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಸರ್ಕಾರದ ಮೇಲಿನ ಶೇ.40ರಷ್ಟು ಕಮಿಷನ್ ಆರೋಪಗಳಿವೆ. ಸಮಯ ಬಂದಾಗ ದಾಖಲಾತಿ ಬಿಡುಗಡೆ ಮಾಡುತ್ತೇವೆ. ಸದ್ಯಕ್ಕೆ ಪ್ರಕರಣ ನ್ಯಾಯಾಲಯದ ಮೆಟ್ಟಿಲಿನಲ್ಲಿದೆ. ಹೀಗಾಗಿ ಪ್ರಸ್ತುತ ಆ ವಿಚಾರದ ಬಗ್ಗೆ ಹೆಚ್ಚು ಚರ್ಚಿಸುವುದಿಲ್ಲ ಎಂದು ತಿಳಿಸಿದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!