Mysore
15
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಬಿಜೆಪಿ ನಾಯಕನ ಬಂಧನ

ಮಧ್ಯಪ್ರದೇಶ : ರಸ್ತೆಬದಿ ಕುಳಿತಿದ್ದ ಬುಡಕಟ್ಟು ಯುವಕನ ಮೇಲೆ ಬಿಜೆಪಿ ನಾಯಕ ಪ್ರವೇಶ್‌ ಶುಕ್ಲಾ ಮೂತ್ರ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಮಧ್ಯರಾತ್ರಿ ಬುಡಕಟ್ಟು ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ. ಈ ಕೃತ್ಯದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಕ್ಯಾಮರಾದಲ್ಲಿ ಸೆರೆಯಾದ ವ್ಯಕ್ತಿ ಪ್ರವೇಶ್ ಶುಕ್ಲಾ ಅವರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಕಳೆದ ವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಘಟನೆ ನಡೆದ 6 ದಿನಗಳ ನಂತರ ಈ ವಿಡಿಯೋವನ್ನು ಪೊಲೀಸರು ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ, ಪ್ರವೇಶ್ ಶುಕ್ಲಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ) ಮತ್ತು SC/ST ಕಾಯಿದೆಯ ಅಡಿಯಲ್ಲಿ ಶುಕ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ಈ ವೈರಲ್ ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರವೇಶ್ ಶುಕ್ಲಾ ವಿರುದ್ಧ ಆರೋಪ ಹೊರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿಯೂ ಹೇಳಿದ್ದರು. ಅಲ್ಲದೆ, ಆರೋಪಿಗೆ “ಕಠಿಣವಾದ ಶಿಕ್ಷೆ” ಯನ್ನು ಸರ್ಕಾರ ಖಚಿತಪಡಿಸುತ್ತದೆ. “ನಾವು ಅವನನ್ನು ಯಾವುದೇ ಕಾರಣಕ್ಕೂ ಸುಮ್ಮನೇ ಬಿಡುವುದಿಲ್ಲ’’ ಎಂದು ಶಿವರಾಜ್‌ ಸಿಂಗ್ ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಇನ್ನು, ಆರೋಪಿ ಬಿಜೆಪಿಗೆ ಸೇರಿದವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವರಾಜ್‌ ಸಿಂಗ್ ಚೌಹಾಣ್, ಅಪರಾಧಿಗಳಿಗೆ ಜಾತಿ, ಧರ್ಮ ಮತ್ತು ಪಕ್ಷವಿಲ್ಲ. ಒಬ್ಬ ಅಪರಾಧಿ ಕೇವಲ ಅಪರಾಧಿ. ಅವನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇದೇ ರೀತಿಯ ಭಾವನೆಗಳನ್ನು ಪ್ರತಿಧ್ವನಿಸಿದ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ, “ಅವರು ಯಾವುದೇ ಪಕ್ಷವಾಗಿದ್ದರೂ, ಯಾರೇ ತಪ್ಪು ಮಾಡಿದರೂ ಶಿಕ್ಷೆಗೆ ಗುರಿಯಾಗುತ್ತಾರೆ” ಎಂದು ಹೇಳಿದ್ದಾರೆ.

ಈ ಘಟನೆ ಮೂರು ತಿಂಗಳ ಹಿಂದೆ ನಡೆದಿದ್ದು ಎನ್ನಲಾಗಿದೆ. ವಿಡಿಯೋ ವೈರಲ್‌ ಆದ ಬಳಿಕ ಅದು ಬೆಳಕಿಗೆ ಬಂದಿದ್ದು, ಮಂಗಳವಾರ ಪ್ರವೇಶ್‌ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!