Mysore
20
clear sky

Social Media

ಶನಿವಾರ, 14 ಫೆಬ್ರವರಿ 2026
Light
Dark

ಚಿಕ್ಕೋಡಿ: ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ

ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು.

ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು‌ ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆಯ ವೇಳೆ ಜೈನಮುನಿಯ ಹತ್ಯೆಯಾಗಿರುವುದು ಬಯಲಾಗಿದೆ.

ತನಿಖೆ ಸಂದರ್ಭದಲ್ಲಿ ರಾತ್ರಿಯಿಡೀ ಇಬ್ಬರು ಆರೋಪಿಗಳು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ನೀಡದೇ ಸತಾಯಿಸಿದ್ದರು.

ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದಿದ್ದೇವೆ ಎಂದಿದ್ದರು. ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದರು. ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ ಪೊಲೀಸರಿಗೆ ಶವ ದೊರೆತಿಲ್ಲ. ಇಂದು ಬೆಳಗ್ಗೆ 6.30ರಿಂದ ಮುನಿಗಳ ಮೃತದೇಹದ ಶೋಧಕಾರ್ಯ ಮತ್ತೆ ನಡೆಯಲಿದೆ ಎಂದು ತಿಳಿದುಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!