Mysore
23
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಟಾಟಾ ಟೆಕ್ನಾಲಜೀಸ್‌ನಿಂದ ರಾಜ್ಯದಲ್ಲಿ 2000 ಕೋಟಿ ಹೂಡಿಕೆ: ಎಂ.ಬಿ. ಪಾಟೀಲ್

ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿಇಎಫ್‌ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ.

ಕಂಪನಿಯ ಉನ್ನತ ಅಧಿಕಾರಿಗಳು ಬುಧವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಪ್ರಸ್ತಾವ ಸಲ್ಲಿಸಿ ಮಾತುಕತೆ ನಡೆಸಿದರು.

https://twitter.com/MBPatil/status/1679094417779564544?s=20

ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳನ್ನು (ಎಂಎಸ್ಎಂಇ)ಗಳನ್ನು ಗಮನದಲ್ಲಿರಿಸಿಕೊಂಡು ಈ ಘಟಕಗಳನ್ನು ಸ್ಥಾಪಿಸುವುದು ಕಂಪನಿಯ ಉದ್ದೇಶವಾಗಿದೆ. ಸರ್ಕಾರ‌ ಖಾಸಗಿ ಸಹಭಾಗಿತ್ವದ ಪಿಪಿಪಿ ಮಾದರಿಯಲ್ಲಿ ಇದನ್ನು ಸ್ಥಾಪಿಸುವ ಯೋಜನೆಯಿದ್ದು, ಟಾಟಾ ಟೆಕ್ನಾಲಜೀಸ್ ಶೇ. 70ರಷ್ಟು ಹೂಡಿಕೆ ಮಾಡಿದರೆ ಸರ್ಕಾರದ ಪಾಲು ಶೇ. 30ರಷ್ಟು ಇರಲಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

ಎಂಎಸ್ಎಂಇಗಳಿಗಾಗಿ ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್ ಸ್ಥಾಪನೆ ಸಂಬಂಧ ಪ್ರಸ್ತಾವ ಸಲ್ಲಿಕೆಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು ಎನ್ನಲಾಗಿದೆ. ಪ್ರತಿ ಒಂದು ಕೇಂದ್ರಕ್ಕೆ ಸುಮಾರು 630 ಕೋಟಿ ರೂ. ವೆಚ್ಚವಾಗಲಿದೆ.

ಈ ಕೇಂದ್ರಗಳಿಂದ ಈಗ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ ಅಡ್ವಾನ್ಸ್ ಮ್ಯಾನಫ್ಯಾಕ್ಚರಿಂಗ್ 4.0, ಎಲೆಕ್ಟ್ರಿಕ್ ವೆಹಿಕಲ್ ಟೆಸ್ಟಿಂಗ್ ಮತ್ತು ಬಾಹ್ಯಾಕಾಶ ಹಾಗೂ ರಕ್ಷಣಾ ವಲಯದ ಉದ್ದಿಮೆಗಳಿಗೆ ಹೆಚ್ಚಿನ ಉಪಯೋಗ ಆಗಲಿದೆ. ಅದೇ ರೀತಿ ಈ ವಲಯಗಳ ಸ್ಟಾರ್ಟ್ ಅಪ್‌ಗಳಿಗೂ ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್‌ ವಿವರಿಸಿದರು.

ಈ ಪ್ರಸ್ತಾವ‌ ಸ್ವಾಗತಾರ್ಹ ಎಂದ ಸಚಿವರು

ಸರ್ಕಾರವೂ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳನ್ನು ಬಲಪಡಿಸಲು ಒತ್ತು ಕೊಟ್ಟಿದೆ. ಪ್ರತಿ ಕೇಂದ್ರಕ್ಕೆ ಸುಮಾರು ಐದು ಎಕರೆಯಷ್ಟು ಜಾಗ ಬೇಕಾಗಲಿದ್ದು, ಇದನ್ನು ಎಲ್ಲಿ ಕೊಡಬೇಕೆಂಬ ಬಗ್ಗೆ ಬರುವ ದಿನಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.

ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಪವನ್ ಭಗೇರಿಯಾ, ಉಪಾಧ್ಯಕ್ಷ ಪುಷ್ಕರಾಜ್ ಕೌಲಗೂಡ್, ಮುಖ್ಯಸ್ಥ ಪ್ರವೀಣ್ ದಿವೇಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!