Mysore
28
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಸರ್ಕಾರಿ ಶಾಲೆ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡುವ ಯೋಜನೆಗೆ ಆಗಸ್ಟ್ 18ರಂದು ಚಾಲನೆ

ಶಿವಮೊಗ್ಗ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಿಂದ ಪ್ರಾರಂಭವಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ ಪೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಮೊದಲು 8 ನೇ ತರಗತಿಯವರೆಗೆ ಈ ಯೋಜನೆ ಜಾರಿಗೊಳಿಸಬೇಕು ಎಂದಾಗಿತ್ತು. ಆದರೆ ಈಗ ಹತ್ತನೇ ತರಗತಿವರೆಗೂ ವಿಸ್ತರಿಸಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಹಿನ್ನಲೆಯಲ್ಲಿ ಈ ಯೋಜನೆಯು ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ವಾರದಲ್ಲಿ ಎರಡು ಬಾರಿ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುವುದು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗಾಗಿ ಬಾಳೆಹಣ್ಣನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳು ಅಪೌಷ್ಠಿಕತೆ ಹಾಗೂ ಅನೀಮಿಯಾದಿಂದ ಬಳಲುತ್ತಿರುವುದರಿಂದ ಮೊಟ್ಟೆ ಅಥವಾ ಬಾಳೆಹಣ್ಣು ವಿತರಣೆ ಅನಿವಾರ್ಯವಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ಆದರೆ ಮೊಟ್ಟೆ ವಿತರಣೆ ವಿಚಾರವಾಗಿ ಆಕ್ಷೇಪಗಳು ವ್ಯಕ್ತವಾಗಿದ್ದವು. ಮೊಟ್ಟೆ ವಿತರಣೆಯು ವಿದ್ಯಾರ್ಥಿಗಳಲ್ಲಿ ಅಸಮಾನತೆಗೆ ಕಾರಣವಾಗಲಿದೆ ಎಂದು ಹಲವರು ವಾದಿಸಿದ್ದರು. ಆದರೆ, ಮೊಟ್ಟೆಯು ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಅವಶ್ಯಕವಾಗಿದೆ. ಆರೋಗ್ಯಕರ ಆಹಾರ ಸೇವನೆಯಿಂದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಸಾಮರ್ಥ್ಯವೂ ಹೆಚ್ಚಳವಾಗುತ್ತದೆ ಎಂದು ಮೊಟ್ಟೆ ವಿತರಣೆಯ ಪರ ಹಲವರು ಪ್ರತಿಪಾದಿಸಿದ್ದರು.

2007ರಲ್ಲಿಯೇ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಈ ಯೋಜನೆಯನ್ನು ಜಾರಿಗೊಳಿಸುವ ಕುರಿತು ಚಿಂತನೆ ನಡೆಸಿದ್ದರು. ಆದರೆ ಸಮಾಜದ ಕೆಲ ಗುಂಪುಗಳಿಂದ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಅಲ್ಲಿಗೆ ಕೈಬಿಡಲಾಗಿತ್ತು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಚಿಕ್ಕಿಯನ್ನು ವಿತರಿಸುವುದಾಗಿ ಸರ್ಕಾರ ಹೇಳಿತ್ತು. ಈಗ ಚಿಕ್ಕಿ ನೀಡುವ ಯೋಜನೆಯನ್ನು ಕೈಬಿಟ್ಟು ಬಾಳೆಹಣ್ಣನ್ನು ನೀಡುವುದಾಗಿ ಘೋಷಿಸಿದೆ.
Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!