Mysore
22
overcast clouds

Social Media

ಶನಿವಾರ, 02 ಮೇ 2026
Light
Dark

ಜಾತಿ ನಿಂದನೆ ಆರೋಪ : ಸಚಿವ ಡಿ. ಸುಧಾಕರ್‌ ವಿರುದ್ಧ ದೂರು ದಾಖಲು

ಬೆಂಗಳೂರು : ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ದೂರು ದಾಖಲಾಗಿದೆ.

ನಗರದ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲಿಸಲಾಗಿದ್ದು, ಸುಬ್ಬಮ್ಮ ಎಂಬುವರು ದೂರುದಾರರಾಗಿದ್ದಾರೆ. ದೂರು ಆಧರಿಸಿ ಸಚಿವ ಡಿ.ಸುಧಾಕರ್, ಶ್ರೀನಿವಾಸ್ ಮತ್ತು ಭಾಗ್ಯಮ್ಮ ಎಂಬುವರ ವಿರುದ್ಧ ದಲಿತರ ಮೇಲೆ ದೌರ್ಜನ್ಯ, ವಂಚನೆ, ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಸುಧಾಕರ್ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.

ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಕಂಪೆನಿಯ ಪಾಲುದಾರರಾದ ಸಚಿವ ಸುಧಾಕರ್ ಅವರು ಯಲಹಂಕ ಗ್ರಾಮದ ಸರ್ವೆ ನಂ. 108/1ರ ಜಮೀನನ್ನು ಮೋಸದಿಂದ ಕಬಳಿಸಿದ್ದಾರೆ. ಈ ಜಮೀನಿನ ವಿವಾದ ಕೋರ್ಟ್‌ನಲ್ಲಿ ಬಾಕಿಯಿದ್ದರೂ, ಸಚಿವರು ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿದ್ದ ತಮ್ಮ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಕುಟುಂಬದ ಮಹಿಳೆಯರನ್ನು ಹೊರಹಾಕಿ ಜೆಸಿಬಿ ಯಂತ್ರ ಬಳಸಿ ಮನೆಯನ್ನು ಕೆಡವಲಾಗಿದೆ ಎಂದು ಸುಬ್ಬಮ್ಮ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಆಸ್ತಿಗೆ 11 ಮಂದಿ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ಸುಧಾಕರ್ ಅವರ ಪುತ್ರ ಸುಹಾಸ್ ಪೊಲೀಸ್ ದೂರು ನೀಡಿದ ಒಂದು ದಿನದ ನಂತರ ಈ ಪ್ರಕರಣ ನಡೆದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!