Mysore
16
clear sky

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

ಅಭಿನವ ಹಾಲಶ್ರೀಗಿಲ್ಲ ಜಾಮೀನು : 10 ದಿನ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು : ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು 10 ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ. ಸೆ.29 ರ ತನಕ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆ.29 ರಂದು ನಡೆಸಲಿದೆ.

ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ನಾಪತ್ತೆಯಾಗಿದ್ದರು. ಒಡಿಶಾದಲ್ಲಿ ಮಾರುವೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ರೈಲ್ವೆ ಪೊಲೀಸರ ನೆರವಿನಿಂದ ಬಂಧಿಸಿ ಬೆಂಗಳೂರಿಗೆ ವಾಪಸ್‌ ಕರೆತರಲಾಗಿತ್ತು. ಸಿಸಿಬಿ ಪೊಲೀಸರು ಇಂದು 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದ್ದರು.

ಆರೋಪಿಯನ್ನು 14 ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ವೇಳೆ ಹಾಲಶ್ರೀ ಪರ ವಕೀಲ ಅರುಣ್‌ ಶ್ಯಾಂ ಕೂಡ ಹಾಜರಿದ್ದರು. ಪೊಲೀಸ್‌ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರೋಪಿಗೆ ಜಾಮೀನು ನೀಡದಂತೆ ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಕೀಲರು ಆಕ್ಷೇಪಿಸಿದರು. ತನಿಖೆ ನಡೆಯುವ ಮಧ್ಯೆ ಜಾಮೀನು ನೀಡಬಾರದು. ಸಾಕ್ಷಿ ನಾಶವಾಗುತ್ತದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯನ್ನು 10 ದಿನ ಪೊಲೀಸ್‌ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!