Mysore
21
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೋಸ್ಟ್‌ ವಾಂಟೆಡ್‌ ಲಿಸ್ಟ್‌ನಲ್ಲಿದ್ದ ಮೂವರು ಭಯೋತ್ಪಾದಕರ ಬಂಧನ

ನವದೆಹಲಿ : ಅತ್ಯಂತ ದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದ ಮೋಸ್ಟ್‌ ವಾಂಟೆಡ್‌ ಪಟ್ಟಿಯಲ್ಲಿದ್ದ ಮೂವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ದೆಹಲಿಯ ವಿಶೇಷ ಸೆಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕರ್ನಾಟಕದ ಹುಬ್ಬಳ್ಳಿ- ಧಾರವಾಡ ಹಾಗೂ ಪಶ್ಚಿಮ ಘಟ್ಟದಲ್ಲಿ ಉಗ್ರರ ಕ್ಯಾಂಪ್‌ ಸ್ಥಾಪಿಸುವ ಉದ್ದೇಶ ಹೊಂದಿದ್ದರು ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

ಬಂಧಿತರನ್ನು ಶಹನವಾಜ್, ಮೊಹಮ್ಮದ್ ರಿಜ್ವಾನ್ ಮತ್ತು ಮೊಹಮ್ಮದ್ ಅರ್ಷದ್ ವಾರ್ಸಿ ಎಂದು ಗುರುತಿಸಲಾಗಿದೆ. ಈ ಪೈಕಿ ಶಹನವಾಜ್‌ನನ್ನು 2 ದಿನದ ಹಿಂದೆಯೇ ಬಂಧಿಸಲಾಗಿತ್ತಾದರೂ ಅಧಿಕೃತವಾಗಿ ಬಂಧನವನ್ನು ಘೋಷಿಸಿರಲಿಲ್ಲ. ಸೋಮವಾರ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್‌ ಆಯುಕ್ತೆ ರೇಣುಕಾ ಸುಕುಮಾರ್‌, ಸ್ಥಳೀಯರು ಇದರಲ್ಲಿ ಶಾಮೀಲಾದ ಮಾಹಿತಿ ಈವರೆಗೂ ಸಿಕ್ಕಿಲ್ಲ. ಬಂಧಿತರ ಬಗ್ಗೆ ದೆಹಲಿ ಪೊಲೀಸರ ಜತೆ ಸಂಪರ್ಕದಲ್ಲಿದ್ದೇವೆ. ನಮ್ಮ ವ್ಯಾಪ್ತಿಯಲ್ಲಿ ಅಂತಹ ಕೃತ್ಯಗಳು ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇವರೆಲ್ಲ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಘಟ್ಟ ಪ್ರದೇಶದಲ್ಲಿ ತಮ್ಮ ನೆಲೆ ಸ್ಥಾಪಿಸಿ, ಬಳಿಕ ದೇಶದಲ್ಲಿ ಐಸಿಸ್‌ ಉಗ್ರರ ನೆಲೆ ವಿಸ್ತರಿಸಿ ಭಯೋತ್ಪಾದಕ ದಾಳಿ ನಡೆಸಲು ಹಾಗೂ ಅಶಾಂತಿ ಸೃಷ್ಟಿಸಲು ಸಂಚು ರೂಪಿಸಿದ್ದರು. ಈ ಸಂಬಂಧ ದೇಶದ ಪಶ್ಚಿಮ ಮತ್ತು ದಕ್ಷಿಣದ ಭಾಗಗಳನ್ನು ಪರಿಶೀಲನೆ ಮಾಡಿದ್ದರು ಎಂದು ದೆಹಲಿ ಪೊಲೀಸ್‌ ವಿಶೇಷ ಸೆಲ್‌ ಅಧಿಕಾರಿ ಧಾಲಿವಾಲ್‌ ಹೇಳಿದ್ದಾರೆ.

ಈತನ ಸ್ನೇಹಿತರು ಪುಣೆ ಉಗ್ರ ಪ್ರಕರಣದಲ್ಲಿ ಕೆಲ ತಿಂಗಳ ಹಿಂದೆ ಬಂಧಿಯಾಗಿದ್ದರು. ಅವರು ಬೆಳಗಾವಿ ಸಮೀಪದ ಮಹಾರಾಷ್ಟ್ರದ ಅಂಬೋಲಿ ಅರಣ್ಯದಲ್ಲಿ ಉಗ್ರ ತರಬೇತಿ ಶಿಬಿರ ನಡೆಸಿದ್ದರು ಎಂಬುದು ಬೆಳಕಿಗೆ ಬಂದಿದೆ‌. ವಿಶೇಷವೆಂದರೆ ಎಲ್ಲ ಶಂಕಿತ ಉಗ್ರರೂ ಎಂಜಿನಿಯರ್‌ಗಳಾಗಿದ್ದು, ಈ ಪೈಕಿ ವಾರ್ಸಿ ಎಂಬಾತ ಪಿಎಚ್‌ಡಿ ಕೂಡ ಮಾಡುತ್ತಿದ್ದ. ಇವರೆಲ್ಲ ಬಾಂಬ್ ತಯಾರಿಯಲ್ಲಿ ಪರಿಣಿತರಾಗಿದ್ದರು ಎಂದು ದೆಹಲಿ ಪೊಲೀಸ್‌ ವಿಶೇಷ ಸೆಲ್‌ ಮಾಹಿತಿ ನೀಡಿದೆ. ದೆಹಲಿ ಪೊಲೀಸ್ ವಿಶೇಷ ಸೆಲ್ ಹಲವಾರು ರಾಜ್ಯಗಳಲ್ಲಿನ ಭಯೋತ್ಪಾದಕ ಜಾಲಗಳನ್ನು ಭೇದಿಸಲು ಎನ್‌ಐಎಯೊಂದಿಗೆ ಕೆಲಸ ಮಾಡುವ ಹಲವಾರು ಏಜೆನ್ಸಿಗಳಲ್ಲಿ ಒಂದಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!