Mysore
32
scattered clouds

Social Media

ಸೋಮವಾರ, 25 ಮೇ 2026
Light
Dark

ಸರ್ಕಾರಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಿದ ಮಂಡ್ಯ ಜಿಲ್ಲಾಧಿಕಾರಿ

ಮಂಡ್ಯ : ಸಮಯ ಪಾಲನೆ ಕಡ್ಡಾಯ ಮಾಡಿ ಸರ್ಕಾರಿ ಅಧಿಕಾರಿಗಳ ಕಳ್ಳಾಟಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಬ್ರೇಕ್ ಹಾಕಿದ್ದಾರೆ. ಸರ್ಕಾರಿ ಅಧಿಕಾರಿ ಸಿಬ್ಬಂದಿ ಆಟಾಟೋಪಕ್ಕೆ ಮೂಗುದಾರ ಹಾಕಿದ ಡಿಸಿ ಬಯೋಮೆಟ್ರಿಕ್ ಕಡ್ಡಾಯ ಮಾಡಿ ಕಚೇರಿ ಸಮಯದಲ್ಲಿ ಟೀ ಕಾಫಿ ಕುಡಿಯಲು ಹೋಗುವಂತಿಲ್ಲ ಹಾಗೂ ಸರ್ಕಾರಿ ಕಚೇರಿಯಲ್ಲಿ ಶಿಸ್ತಿನ ಜೊತೆಗೆ ಕಡ್ಡಾಯವಾಗಿ ನಿಯಮ ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ.

ಸರ್ಕಾರಿ ಕಚೇರಿಯಲ್ಲಿ ಕರ್ತವ್ಯದ ವೇಳೆ ಕೆಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಸುಖಾಸುಮ್ಮನೆ ಹೊರಗೆ ತಿರುಗಾಡುವುದು ಹಾಗೂ ಟೀ ಕಾಫಿ ಕುಡಿದ ನೆಪದಲ್ಲಿ ಕಾಲಹರಣ ಮಾಡುತ್ತಿದ್ದದ್ದು ಗಮನಕ್ಕೆ ಬಂದಿದ್ದರಿಂದ ಮಂಡ್ಯ ಜಿಲ್ಲಾಧಿಕಾರಿ ಈ ಖಡಕ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಸಾರ್ವಜನಿಕರು ಕಚೇರಿ ಬಳಿ ಅಧಿಕಾರಿಗಳಿಗಾಗಿ ಗಂಟೆಗಟ್ಟಲೆ ಕಾಯುವುದು ಮತ್ತು ಅಧಿಕಾರಿಗಳು ಕಚೇರಿಗೆ ಇಷ್ಟ ಬಂದಾಗ ಬರುವುದು ಹಾಗೂ ಹೋಗುತ್ತಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿ ಅವರ ಕಳ್ಳಾಟಕ್ಕೆ ಬ್ರೇಕ್ ಹಾಕಿದ್ದಾರೆ.

ಕಚೇರಿಯ ನಿಗದಿತ ಅವಧಿಯಲ್ಲಿ ಸಮಯ ಪ್ರಜ್ಞೆ ಪಾಲನೆ ಮಾಡೋದು ಕಡ್ಡಾಯವಾಗಿದ್ದು, ಕರ್ತವ್ಯದ ವೇಳೆಯಲ್ಲಿ ಟೀ ಅಥವಾ ಕಾಫಿ ಗೆ ಎಂದು ಸಿಬ್ಬಂದಿ ವರ್ಗ ಕಚೇರಿಯಿಂದ ಹೊರಗಡೆ ಹೋಗದಂತೆ ನಿರ್ಬಂಧ ಹೇರಲಾಗಿದೆ. ಪ್ರತಿ ಕಚೇರಿಯಲ್ಲಿಯೂ ಸಿಬ್ಬಂದಿ ವರ್ಗದ ಚಲನವಲನಗಳ ಮೇಲೆ ನಿಗವಹಿಸುವಂತೆ ಸೂಚನೆ ನೀಡಲಾಗಿದ್ದು, ಎಲ್ಲಾ ಕಚೇರಿಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಪದ್ಧತಿ ಕಡ್ಡಾಯವಾಗಿದೆ ಜೊತೆಗೆ ಕಚೇರಿಯ ಮುಖ್ಯಸ್ಥರು ಪ್ರತಿ ವಾರಕ್ಕೊಮ್ಮೆ ಹಾಜರಾತಿಯನ್ನು ಪರಿಶೀಲನೆ ಮಾಡಬೇಕು ಎಲ್ಲಾ ಶಾಖೆಗಳಿಗೂ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಬೇಕು ಅಧಿಕಾರಿ ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಇಲಾಖೆ ಕುರಿತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕು ಅಲ್ಲದೆ ಅನಧಿಕೃತವಾಗಿ ಸರ್ಕಾರಿ ವಾಹನ ಬಳಕೆಗೆ ನಿರ್ಬಂಧವನ್ನು ನೀಡಲಾಗಿದ್ದು ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಮಂಡ್ಯ ಜಿಲ್ಲಾಧಿಕಾರಿ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!