Mysore
22
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಕಾಂಗ್ರೆಸ್‌ ಸರ್ಕಾರ 5 ವರ್ಷ ನಡೆಯಲಿ : ಶ್ರೀರಾಮುಲು

ಕೋಲಾರ : ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಜನ ಆಶಿರ್ವಾದ ಮಾಡಿದ್ದಾರೆ. ಹಾಗಾಗಿ ಸರ್ಕಾರಕ್ಕೆ ಧಕ್ಕೆ ತರುವ ಕೆಲಸವನ್ನು ಯಾರೂ ಕೂಡ ಮಾಡಬಾರದು. 5 ವರ್ಷಗಳ ಕಾಲ ಅವರ ಆಡಳಿತ ನಡೆಯಲಿ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೇಳಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಗೆ ಉಳಿಗಾಲವಿಲ್ಲ ಎನ್ನುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ ಸರ್ಕಾರ ಬೀಳುತ್ತೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ರಜ್ಯದ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡುವ ಮೂಲಕ ಆಶಿರ್ವಾದ ಮಾಡಿದ್ದಾರೆ ಹಾಗಾಗಿ ಅವರು 5 ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಲಿ. ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಸರ್ಕಾರಕ್ಕೆ ಯಾರೂ ಕೂಡ ಧಕ್ಕೆ ತರುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ.

ಇನ್ನು ಡಿಕೆಶಿ ಪ್ರಕರಣವನ್ನು ವಾಪಸ್‌ ಪಡೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಬಿಐ ತನಿಖೆ ಆಗಬೇಕಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಪ್ರಕರಣವನ್ನು ಕ್ಯಾಬಿನೆಟ್‌ ವಾಪಸ್‌ ಪಡೆಯಲು ಅನುಮತಿ ನೀಡಿರುವುದು ಭಯ ತರಿಸಿದೆ. ಅವರು ಸರ್ಕಾರವನ್ನು ಬೊಂಬೆಯಂತೆ ನಡೆಸಿಕೊಳ್ಳುತ್ತಿದ್ದಾರೆ. ಇದನ್ನು ನೋಡಿದರೆ ಸರ್ಕಾರವೇ ಅವರಿಗೆ ತಲೆ ಬಾಗಿದೆಯಾ ಎಂಬ ಪ್ರಶ್ನೆ ಕಾಡುತ್ತದೆ. ಡಿಕೆಶಿಗೆ ಕಾನೂನಿನ ಬಗ್ಗೆ ಗೌರವ ಇದ್ದಿದ್ದರೆ, ನ್ಯಾಯಯುತವಾಗಿ ಪ್ರಕರಣದಿಂದ ಹೊರಬರುವ ವಿಶ್ವಾಸ ಇದ್ದಿದ್ದರೆ ಈ ರೀತಿ ಮಾಡುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ್ದ ಹಿಂದಿನ ಬಿಜೆಪಿ ಅವಧಿಯ ಸರ್ಕಾರದ ಆದೇಶವನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಕಳೆದ ವಾರ ನಡೆದ ಕ್ಯಾಬಿನೆಟ್‌ ಮೀಟಿಂಗ್‌ ನಲ್ಲಿ ತೀರ್ಮಾನಿಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!