Mysore
23
overcast clouds

Social Media

ಸೋಮವಾರ, 27 ಜುಲೈ 2026
Light
Dark

ʼಮಾತೃ ಭಾಷೆ ಕಡ್ಡಾಯ ಮಸೂದೆʼಯನ್ನು ಕೇಂದ್ರ ತಿರಸ್ಕರಿಸಿದೆ: ಮಧು ಬಂಗಾರಪ್ಪ

ಬೆಳಗಾವಿ : ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಒಂದರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ತಿರಸ್ಕಾರಗೊಳಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನ ಪ್ರಶೋತ್ತರ ಕಲಾಪ ವೇಳೆ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ, 2015ರಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ 1ರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸಿ ಅಂಗೀಕರಿಸಿದ ಮಸೂದೆಯನ್ನು ಕೇಂದ್ರ ಸರ್ಕಾರದ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ಮಾತೃಭಾಷೆನ್ನು ಕಡ್ಡಾಯಗೊಳಿಸುವುದು, ಶಿಕ್ಷಣದ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಸೂದೆಯನ್ನು ತಿರಸ್ಕಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇನ್ನೂ ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ರಾಜ್ಯದ ಈ ವಿಧೇಯಕವನ್ನು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಕೇಂದ್ರ ಶಿಕ್ಷಣ ಇಲಾಖೆ ತಿರಸ್ಕರಿಸಿದೆ ಎಂದೂ ಸಚಿವರು ಉಲ್ಲೇಖಿಸಿದರು.

ಇದಕ್ಕೂ ಮೊದಲು ಯು.ಬಿ.ವೆಂಕಟೇಶ್ 1ರಿಂದ 5ನೇ ತರಗತಿಯ ವರೆಗೆ ವ್ಯಾಸಂಗ ಮಾಡುತ್ತಿರುವ ಶಾಲಾ ಮಕ್ಕಳಿಗೆ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ, ಇಲ್ಲವೇ ಮಾತೃ ಭಾಷೆಯನ್ನಾಗಿ ಕಡ್ಡಾಯಗೊಳಿಸಬೇಕೆಂಬುದು ಈ ಮಸೂದೆಯ ಮೂಲ ಉದ್ದೇಶ. ನಮ್ಮ ಮಕ್ಕಳಿಗೆ ನಾವೇ ಕನ್ನಡ ಕಲಿಸಲು ಆದ್ಯತೆ ನೀಡದಿದ್ದರೆ ಹೇಗೆ? ಇದಕ್ಕೆ ರಾಜ್ಯ ಸರ್ಕಾರ ಪರ್ಯಾಯ ಮಾರ್ಗವನ್ನು ಹುಡುಕಬೇಕೆಂದು ಸಲಹೆ ನೀಡಿದರು.

ಮಧುಬಂಗಾರಪ್ಪ ಪ್ರಥಮ ಭಾಷೆಯಾಗಿ ಕನ್ನಡವನ್ನು ಕಡ್ಡಾಯ ಮಾಡಿದ್ದೇವೆ. ಆದರೆ ಕೇಂದ್ರ ಮೀಡಿಯಂ ಆಫ್ ಸ್ಟಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನಲೆಯಲ್ಲಿ ಕಡ್ಡಾಯ ಮಾಡಲು ಬರುವುದಿಲ್ಲ ಎಂದು ಮಸೂದೆಯನ್ನು ತಿರಸ್ಕರಿಸಿದೆ ಎಂದರು. ಇದಕ್ಕೆ, ಯು.ಬಿ.ವೆಂಕಟೇಶ ಈ ಮಸೂದೆಯನ್ನು ಕೇಂದ್ರ ತಿರಸ್ಕರಿಸಿದೆ ಎಂದರೆ ಕೇಂದ್ರ ಸರ್ಕಾರ ನಮ್ಮ ಮೇಲೆ ಬಲವಂತವಾಗಿ ಹಿಂದಿ ಹೇರುತ್ತಾರೆ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!