ಕೊಡಗು : ನೆರೆಯ ರಾಜ್ಯಗಳಲ್ಲಿ ಮಹಾಮಾರಿ ಕೊರೊನಾ ಉಪಟಳ ಹೆಚ್ಚಾಗಿದ್ದು, ರಾಜ್ಯದಲ್ಲಿಯೂ ಕೊರೊನಾ ರೂಪಾಂತರ ತಳಿ ಕಂಡುಬಂದಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ 60 ವರ್ಷದ ಮೇಲ್ಪಟ್ಟವರೆಲ್ಲರೂ ಮಾಸ್ಕ್ ಬಳಸುವಂತೆ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕುಶಾಲ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ರೂಪಾಂತರ ತಳಿ ಬಗ್ಗೆ ಯಾರು ಭಯಪಡಬೇಕಾಗಿಲ್ಲ. ಈ ಬಗ್ಗೆ ಒಂದು ಸುತ್ತಿನ ಸಭೆ ನಡೆಸಲಾಗಿದ್ದು, ಕೋವಿಡ್ ವಿಚಾರವಾಗಿ ಮುಂಜಾಗ್ರತ ಕ್ರಮಗಳ ಬಗ್ಗೆ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು. ನೆನ್ನೆಯೆ ಡಾ. ರವಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಕೆಲವು ಸಲಹೆಗಳನ್ನು ಪಡೆಯಲಾಗಿದೆ. 60 ವರ್ಷ ಮೇಲ್ಪಟ್ಟವರು, ಕಫ, ಜ್ವರ, ಕಿಡ್ನಿ ಸಮಸ್ಯೆ, ಉಸಿರಾಟ ತೊಂದರೆ, ಹೃದಯ ಸಂಬಂಧಿ ಕಾಯಿಲೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಮಿತಿ ಸಲಹೆ ನೀಡಿದೆ. ಸಮಿತಿ ಸಲಹೆಗಳನ್ನಾಧರಿಸಿ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ.
ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ ಎಂದರು.





