Mysore
26
broken clouds

Social Media

ಸೋಮವಾರ, 23 ಮಾರ್ಚ್ 2026
Light
Dark

2024ರ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ: ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು : ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ದಿನಾಂಕ ಪ್ರಕಟವಾಗಿದೆ. ಈ ಪರೀಕ್ಷೆಯು ಮುಂದಿನ ವರ್ಷದ ಏ.20 ಮತ್ತು 21 ರಂದು ನಡೆಯಲಿದೆ.

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25ರಲ್ಲಿ ಪ್ರವೇಶಾತಿ ಬಯಸುವವರಿಗೆ 2024 ರ ಏಪ್ರಿಲ್‌ 20 (ಶನಿವಾರ) ಮತ್ತು 21ರಂದು (ಭಾನುವಾರ) ಸಿಇಟಿ ಪರೀಕ್ಷೆ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್.ರಮ್ಯಾ ತಿಳಿಸಿದ್ದಾರೆ.

ಈ ಬಗ್ಗೆ ಇಂದು (ಶುಕ್ರವಾರ) ಪತ್ರಿಕಾ ಪ್ರಕಟಣೆ ನೀಡಿದ್ದು, ಏ.20ರ ಬೆಳಿಗ್ಗೆ 10.30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ ಗಣಿತ, 21ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಹಾಗೆಯೇ, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.19ರ ಶುಕ್ರವಾರದಂದು ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸುಗಳು, ಪಶು ಸಂಗೋಪನೆ, ಬಿ.ಎಸ್ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ‌ಕೋರ್ಸುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಈ ಸೂಚನೆ ಅನ್ವಯಿಸುತ್ತದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್‌.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ, ಅಂಥವರು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಬಿ.ಇ.ಗೆ ನೇರ ಪ್ರವೇಶ: ಎಂಜಿನಿಯರಿಂಗ್‌ ನ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಗೆ ಏ.18ರಂದು ಸಿಇಟಿ ನಡೆಸಲಾಗುವುದು. ಸದ್ಯದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಇದೇ ರೀತಿಯಲ್ಲಿ ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್‌, ಎಂ.ಆರ್ಕ್‌ ಕೋರ್ಸುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18 ಮತ್ತು 19ರಂದು ಪಿಜಿಸಿಇಟಿ ನಡೆಸಲಾಗುವುದು. ಇವರಿಗೂ ಸಹ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.

ಶುಲ್ಕ ವಾಪಸ್:‌ 2023ರಲ್ಲಿ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸಿ ನಂತರ ಸೀಟು ರದ್ದುಪಡಿಸಿಕೊಂಡಿರುವ ಅಥವಾ ಹೆಚ್ಚುವರಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಆ ಬಾಬ್ತಿನ ಮೊತ್ತವನ್ನು ಹಿಂದಿರುಗಿಸುತ್ತಿದೆ. ಇಂಥವರು ಡಿ.31ರೊಳಗೆ ಸರಿಯಾದ ವಿವರ ನಮೂದಿಸಬೇಕು ಎಂದು ಪ್ರಾಧಿಕಾರ ತಿಳಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!