ಚಿಕ್ಕಬಳ್ಳಾಪುರ: ೨೦೨೪ ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದನ್ನು ಚಿಕ್ಕ ಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಹಿರಂಗಗೊಳಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಶಾಸಕ ಪ್ರದೀಪ್, ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಬೈಯುವ ಭರದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇವರಾಗಲಿದ್ದಾರೆ ಎಂದು ಶಾಸಕ ಬಹಿರಂಗ ಪಡಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್, ಪರಿಣಾಮ ನೆಟ್ಟಗಿರಲ್ಲ. ನಿಮ್ಮ ಬಾಯಿ ತೆವಲನ್ನು ಕಡಿಮೆ ಮಾಡಿ ಸುಮ್ಮನೆ ಇರಬೇಕು. ಸಂಸತ್ ದಾಳಿ ಮಾಡಿದವನಿಗೆ ಪಾಸ್ ನೀಡಿರುವ ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೀವು ಗೆಲ್ಲುವುದಿಲ್ಲ. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯನೇ ಗೆಲ್ಲೋದು ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.
ಇದರೊಂದಿಗೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟ ಮಗನಿಗಾಗಿ ಲೋಕ ಟಿಕೆಟ್ ನೀಡಲು ಸಿಎಂ ಸಿದ್ದರಾಮಯ್ಯ ಯೋಜಿಸಿದ್ದಾರೆ ಎನ್ನಲಾಗಿತ್ತು. ಅದರಂತೆಯೇ ಶಾಸಕ ಪ್ರದೀಪ್ ಈಶ್ವರ್ ಕೂಡಾ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರನ್ನು ಮುನ್ನಲೆಗೆ ತಂದಿದ್ದಾರೆ. ಇದು ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ಪುಷ್ಠಿ ನೀಡಿದಂತಾಗಿದೆ.





