Mysore
28
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಲೋಕಸಭಾ ಚುನಾವಣೆಯಲ್ಲಿ ಯತೀಂದ್ರ ಸ್ಪರ್ಧಿಸುವುದಿಲ್ಲ: ಸಿಎಂ ಸ್ಪಷ್ಟನೆ

ರಾಯಚೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನಾಗಲಿ ಅಥವಾ ನನ್ನ ಮಗ ಯತೀಂದ್ರ ಆಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ʼಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ತಮ್ಮ ವಿರುದ್ಧ ಸ್ಪರ್ಧಿಸುತ್ತಾರೆ ಎಂದು ಸಂಸದ ಪ್ರತಾಪ್​ ಸಿಂಹ ಅವರಿಗೆ ಭಯ ಶುರುವಾಗಿದೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆʼ ಎಂದರು.

ಆ ಕ್ಷೇತ್ರಗಳ ಶಾಸಕರು, ಸ್ಥಳೀಯ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳ ಶಿಫಾರಸುಗಳ ಆಧಾರದ ಮೇಲೆ ಟಿಕೆಟ್ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಯಾವುದೇ ವೈಯಕ್ತಿಕ ಆಯ್ಕೆಯನ್ನು ಆಧರಿಸಿ ಟಿಕೆಟ್‌ ನೀಡುವುದಿಲ್ಲ. ಪ್ರತಾಪ್ ಸಿಂಹ ಭಯಗೊಂಡಿದ್ದಾರೆ, ಅದಕ್ಕಾಗಿಯೇ ಅವರು ಯತೀಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳುತ್ತಿದ್ದಾರೆ. ನಾನು ಅಥವಾ ಯತೀಂದ್ರ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದೂ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವೀಕ್ಷಕರಾಗಿ ರಾಜ್ಯ ನಗರಾಭಿವೃದ್ಧಿ ಸಚಿವ ಸುರೇಶ ಬಿಎಸ್ (ಬೈರತಿ) ಅವರನ್ನು ನೇಮಿಸಲಾಗಿದೆ. ಸುರೇಶ್ ಅವರು ಸಂಭಾವ್ಯ ಅಭ್ಯರ್ಥಿಗಳ ವರದಿಯನ್ನು ಸಲ್ಲಿಸಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಆ ಮೂಲಕ ಯತೀಂದ್ರ ಸ್ಪರ್ಧೆ ಕುರಿತು ಇದ್ದ ಎಲ್ಲಾ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

ಪ್ರತಾಪ್‌ ಸಿಂಹ ಹೇಳಿದ್ದೇನು?

ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಕ್ಷೇತ್ರದ ಎದುರಾಳಿಯಾದರೆ ಒಳ್ಳೆಯದು. ನಾನು ಯಾರ ಬಗ್ಗೆಯೂ ತೆಲೆ ಕೆಡಿಸಿಕೊಳ್ಳುವುದಿಲ್ಲ. ಯತೀಂದ್ರ ಸ್ಪರ್ಧೆ ಸಿಎಂ ಹಾಗೂ ಯತೀಂದ್ರ ವರ್ಸಸ್‌ ಪತ್ರಕರ್ತ ಪ್ರತಾಪ್‌ ಸಿಂಹ ಆಗಿರುತ್ತದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!