Mysore
25
broken clouds

Social Media

ಗುರುವಾರ, 23 ಏಪ್ರಿಲ 2026
Light
Dark

ಕಾಂಗ್ರೆಸ್‌ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದೆ: ಜಗದೀಶ್‌ ಶೆಟ್ಟರ್‌

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದಾರೆ. ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಕೇಂದ್ರ ನಾಯಕರಾದ ಅಮಿತ್ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಮತ್ತೆ ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ತಂದಿದೆ. ನಾನು ಕಾಂಗ್ರೆಸ್ ಪಕ್ಷ, ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ನವರು ಅನ್ಯಾಯ ಮಾಡಿಲ್ಲ. ಕಾಂಗ್ರೆಸ್ ನವರು ನನಗೆ ಪಕ್ಷದಲ್ಲಿ ಸ್ಥಾನಮಾನ ನೀಡಿ ಗೌರವಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ನಾನು ಪರಿಷತ್ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದು ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು ಎಂದೂ ಶೆಟ್ಟ‌ರ್ ಹೇಳಿದರು.

ದೆಹಲಿ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಬಿಜೆಪಿ ಸೇರ್ಪಡೆಯಾದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!