Mysore
32
clear sky

Social Media

ಗುರುವಾರ, 26 ಫೆಬ್ರವರಿ 2026
Light
Dark

ಮೈಸೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಇಂದು ( ಜನವರಿ 31 ) ಬೆಳ್ಳಂಬೆಳಗ್ಗೆಯೇ ಹಲವು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಆರೋಪಡಿಯಲ್ಲಿ ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಹರ್ಷ ಸೇರಿದಂತೆ ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಹಾಸನ, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಮಂಗಳೂರು ಸೇರಿದಂತೆ ವಿವಿಧೆಡೆ ಲೋಕಾ ಅಧಿಕಾರಿಗಳ ಕಚೇರಿ ಹಾಗೂ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಮಂಡ್ಯ ಲೋಕೋಪಯೋಗಿ ಇಲಾಖೆಯ ಇಇ ಆಗಿರುವ ಹರ್ಷ ಅವರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯದಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದಲ್ಲಿರುವ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್‌ಹೌಸ್‌ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಅಲ್ಲದೇ ಮೈಸೂರಿನ ಮುಡಾ ಇಂಜಿನಿಯರ್‌ ಯಜ್ಞೇಂದ್ರ ಮನೆ ಮೇಲೂ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಜೆಪಿ ನಗರದಲ್ಲಿರುವ ಮನೆ, ವಿಜಯನಗರದಲ್ಲಿರುವ ಅಪಾರ್ಟ್‌ಮೆಂಟ್‌, ಕೆಆರ್‌ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಸಹೋದರನ ಮನೆ ಮೇಲೂ ಸಹ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.

ಹಾಸನದ ಆಹಾರ ನಿರೀಕ್ಷಕ ಜಗನ್ನಾಥ್‌ ನಿವಾಸ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಗನ್ನಾಥ್‌ ಸಹೋದರ ರಿಯಲ್‌ ಎಸ್ಟೇಟ್‌ ಉದ್ಯಮಿ ಕಿರಣ್‌ ನಿವಾಸ ಹಾಗೂ ಕಚೇರಿ ಮೇಲೂ ಸಹ ದಾಳಿ ನಡೆದಿದೆ.

ಅಲ್ಲದೇ ಚಿಕ್ಕಮಗಳೂರಿನ ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ನೇತ್ರಾವತಿ, ತುಮಕೂರಿನ ಶಿರಾ ಗೇಟ್‌ ಬಳಿ ಇರುವ ಕೆಆರ್‌ಡಿಎಲ್‌ ಇಂಜಿನಿಯರ್‌ ಹನುಮಂತರಾಯಪ್ಪ ಮನೆ ಹಾಗೂ ಕಚೇರಿ ಮೇಲೂ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!