Mysore
20
scattered clouds

Social Media

ಗುರುವಾರ, 05 ಮಾರ್ಚ್ 2026
Light
Dark

ಕಟ್ಟಕಡೆಯ ಮನುಷ್ಯನಿಗೂ ಸರ್ಕಾರದಿಂದ ಮೊಟ್ಟಮೊದಲ ಆದ್ಯತೆ: ಎಚ್.ಸಿ ಮಹದೇವಪ್ಪ

ಮೈಸೂರು : ಸಾಮಾಜಿಕ ಅಸಮಾನತೆ ವಿರುದ್ಧವಾಗಿ ಸಂವಿಧಾನವಿದೆ. ಸಂವಿಧಾನಬದ್ದ ಹಕ್ಕುಗಳ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ. ತುಳಿತಕ್ಕೊಳಗಾದ ವರ್ಗವನ್ನು ಮೇಲೆತ್ತುವ ಮೂಲಕ ಕಟ್ಟಕಡೆಯ ಮನುಷ್ಯನಿಗೂ ಮೊಟ್ಟಮೊದಲ ಆದ್ಯತೆಯನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಯಲ್ಲಿ ಆಯ್ಕೆಯಾಗಿರುವ 173 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಿಸಿ ಮಾತನಾಡಿದ ಸಚಿವರು, ತಳ ಸಮುದಾಯದ ಏಳಿಗೆಯೇ ನಮ್ಮ ಸರ್ಕಾರದ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು.

ಪೌರಕಾರ್ಮಿಕ ಬಂಧುಗಳು ಊರಿನ ಕಸ ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡುವಲ್ಲಿ ಪ್ರತಿನಿತ್ಯ ಶ್ರಮವಹಿಸುತ್ತಾರೆ. ಅತ್ಯಂತ ಕಷ್ಟದ, ನಿಕೃಷ್ಟದ ಹಾಗೂ ತ್ಯಾಗದ ಬದುಕು ನಿಮ್ಮದಾಗಿದೆ. ನಿಮ್ಮಿಂದ ಉಳಿದವರು ಸುಖದಿಂದ ಬದಕುದ್ದಾರೆ. ನೀವು ಮಾತ್ರ ಕಷ್ಟದ ಜೀವನವನ್ನೆ ನಡೆಸುತ್ತಾರೆ. ಈ ಪರಿಸ್ಥಿತಿ ಸುಧಾರಣೆಗೆ ಸರ್ಕಾರದಿಂದ ಕ್ರಮವಹಿಸಲಾಗುವುದು ಎಂದರು.

ಈಗಾಗಲೇ ನಮ್ಮ ಸರ್ಕಾರವು 4,400 ಸಫಾಯಿ ಕರ್ಮಚಾರಿಗಳಿಗೆ ತಲಾ 40 ಸಾವಿರ ರೂಪಾಯಿ ಸಹಾಯಧನ ನೀಡಿದೆ‌. ಇದಕ್ಕೆ 18 ಕೋಟಿ ರೂ. ವ್ಯಹಿಸಲಾಗಿದೆ. ಮೈಸೂರು ನಗರ ಪಾಲಿಕೆಯು ರಾಜ್ಯದಲ್ಲಿ ಎರಡನೇ ದೊಡ್ಡ ಜನಸಂಖ್ಯೆಯ ಪಾಲಿಕೆಯಾಗಿದ್ದು, ಇಂದು ನೇಮಕಾತಿ ಆದೇಶ ನೀಡುತ್ತಿರುವುದು ನನಗೆ ವೈಯಕ್ತಿಕವಾಗಿ ಸಂತೋಷವಿದೆ ಎಂದರು.

ಸ್ವಚ್ಛತೆ ಕಾಪಾಡುವುದು ನಿಮ್ಮ ಜವಬ್ದಾರಿ, ಅದರಂತೆ ನಿಮ್ಮ ಯೋಗಕ್ಷೇಮ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ದೇಶದ ಮೂಲ ನಿವಾಸಿಗಳು ನಾವಾಗಿದ್ದು, ನಮ್ಮ ಸಂಸ್ಕೃತಿ ಸಿಂಧೂ ನದಿಯ ನಾಗರಿತೆಯಾಗಿದೆ. ಪ್ರತಿಯೊಬ್ಬರೂ ಮೂಢನಂಬಿಕೆ ತೊರೆದು ವೈಚಾರಿಕತೆ ರೂಢಿಸಿಕೊಳ್ಳದಿದ್ದರೆ ಶತಮಾನಕ್ಕೂ ನಾವು ಮೇಲೆ ಬರಲು ಸಾಧ್ಯವಿಲ್ಲ ಎಂದು ಕಿವಿಮಾತು ಹೇಳಿದರು.

ವಿಜ್ಞಾನ, ತಂತ್ರಜ್ಞಾನ ಬೆಳಿದಿದೆ. ವಿದೇಶಗಳಲ್ಲಿ ಸ್ವಚ್ಛತೆ ಕಸುಬು ಒಂದು ವೃತ್ತಿಯಾಗಿದೆ. ನಮ್ಮ ದೇಶದಲ್ಲಿ ಮಾತ್ರ ಒಂದು ವರ್ಗಕ್ಕೆ ಸೀಮಿತವಾಗಿದೆ. ಇಂದು ಧರ್ಮ, ದೇವರು ಹೆಸರಿನಲ್ಲಿ ಜನರನ್ನು ಭಾವನಾತ್ಮಕವಾಗಿ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯದ ಉದ್ಧಗಲಕ್ಕೂ ‘ಸಂವಿಧಾನ ಜಾಗೃತಿ ಜಾಥಾ’ ಹಮ್ಮಿಕೊಳ್ಳಲಾಗಿದೆ ಎಂದರು.

ಶಾಸಕ ಹರೀಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪಾಲಿಕೆ ಆಯುಕ್ತ ಅರ್ಷಾದ್ ಉರ್ ರೆಹಮಾನ್ ಷರೀಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!