ಬೆಂಗಳೂರು: ಬಳ್ಳಾರಿ ಜಿಲ್ಲೆ ಹೊಸಪೇಟೆಯ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
ಕ್ರೀಡಾ ಸಚಿವ ನಾಗೇಂದ್ರ, ಶಾಸಕ ಗವಿಯಪ್ಪ ಮತ್ತಿತರರು ಸಿಎಂ ಸಿದ್ದರಾಮಯ್ಯ ಜೊತೆಯಲ್ಲಿ ಉಪಸ್ಥಿತರಿದ್ದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸಪೇಟೆಯ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದೆ.
ನೀವೂ ಕೂಡ ತಪ್ಪದೇ ನಿಮ್ಮ ಮನೆಯ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ, ಅವರ ನೆಮ್ಮದಿಯ ನಾಳೆಗಳನ್ನು ಖಾತ್ರಿಪಡಿಸಿ ಎಂದು ಬರೆದುಕೊಂಡಿದ್ದಾರೆ.
ಮಾರ್ಚ್ 3ರಿಂದ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ದೇಶಾದ್ಯಂತ ನಡೆಯಲಿದೆ. ಈ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆ, ಆಸ್ಪತ್ರೆ, ಬಸ್ , ರೈಲ್ವೆ, ವಿಮಾನ ನಿಲ್ದಾಣ, ಗ್ರಾಮ ಪಂಚಾಯಿತಿ, ಪ್ರವಾಸಿ ತಾಣ, ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಲಸಿಕೆ ಲಭ್ಯತೆ ನೀಡಿದೆ.
ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಲಸಿಕೆ ನೀಡಲಾಗುತ್ತದೆ.



