Mysore
29
light rain

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಶ್ರವಣ ದೋಷ ಮುಕ್ತ ಕರ್ನಾಟಕ ನಮ್ಮ ಗುರಿ: ದಿನೇಶ್ ಗುಂಡೂರಾವ್

ಮೈಸೂರು : ಶ್ರವಣ ದೋಷ ಇರುವ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿಯೆ ಗುರುತಿಸಿ ಶಸ್ತ್ರ ಚಿಕಿತ್ಸೆ ಹಾಗೂ ಶ್ರವಣ ಸಾಧನಗಳ ಅಳವಡಿಕೆ ಮೂಲಕ ಗುಣಪಡಿಸಿ ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

ಇಂದು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಶ್ರವಣ ಸಂಜೀವಿನಿ, ಕ್ಲಾಕಿಯರ್ ಇಂಪ್ಲಾಕ್ಟ್ ಯೋಜನೆಯ ಮರು ನಾಮಕರಣ ಹಾಗೂ ಫಲಾನುಭವಿಗಳಿಗೆ ವಾಕ್ ಮತ್ತು ಶ್ರವಣ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಿವಿ ಕೇಳಿಸದೆ ಇರುವ ಕಿವುಡುತನ ಹುಟ್ಟುವಾಗಲೇ ಕೆಲವರಿಗೆ ಬರುತ್ತದೆ. ಇಂತಹ ಮಕ್ಕಳಿಗೆ ಶ್ರವಣ ಸಾಧನಗಳನ್ನು ಅಳವಡಿಸುವ ಮೂಲಕ ಅಲ್ಪ ಸ್ವಲ್ಪ ಕೇಳಿಸುವಂತೆ ಮಾಡಬಹುದಾಗಿದೆ. ಕಿವುಡುತನಕ್ಕೆ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಬರಿಸಬೇಕಾಗಿತ್ತು. ಇದು ಬಡವರಿಗೆ ಅಸಾದ್ಯ. ಇದರಿಂದ ಸರ್ಕಾರದ ವತಿಯಿಂದ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ನಾವು ಒಂದು ವರ್ಷದಲ್ಲಿ ಶ್ರವಣ ದೋಷಕ್ಕೆ 353 ಶಸ್ತ್ರ ಚಿಕಿತ್ಸೆ ಮಾಡಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಇದ್ದೇವೆ. ರಾಜ್ಯದಲ್ಲಿ 27 ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ವಾಕ್ ಮತ್ತು ಶ್ರವಣ ಸಂಸ್ಥೆ ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಶಸ್ತ್ರ ಚಿಕಿತ್ಸೆಗೆ ಮಗುವನ್ನು ಒಳಪಡಿಸಿ ಶ್ರವಣ ಸಾಧನ ಅಳವಡಿಸಿದ ನಂತರ ಅದನ್ನು ಒಂದೆರಡು ವರ್ಷ ವೀಕ್ಷಣೆ ಮಾಡಬೇಕು. ಕಿವಿ ಕೇಳಿಸದ ಮಗುವಿನ ಬೆಳವಣಿಗೆ ಕುಂಠಿತವಾಗುತ್ತದೆ. ಇಂತಹ ಮಗುವನ್ನು ವಿಶೇಷ ಶಾಲೆಗೆ ಸೇರಿಸಿ ಶಿಕ್ಷಣ ನೀಡಬೇಕು. ಇಂತಹ ಮಗುವಿಗೆ ಶಸ್ತ್ರ ಚಿಕಿತ್ಸೆಯ ಮೂಲಕ ಕಿವಿ ಕೇಳಿಸುವಂತೆ ಮಾಡಿದರೆ ಆ ಮಗುವು ಸಾಮಾನ್ಯ ಮಕ್ಕಳ ಜೊತೆ ಬೆರೆತು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಶ್ರವಣ ದೋಷ ನಿವಾರಣೆಗೆ ವಿಶೇಷ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗಿದೆ. ಶ್ರವಣ ದೋಷ ಹೊಂದಿರುವ ಮಕ್ಕಳ ಪೋಷಕರು ಯಾರು ಆತಂಕ ಪಡಬಾರದು. ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆ ನಮ್ಮ ಇಲಾಖೆಯ ಮೊದಲ ಆದ್ಯತೆಯಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ಮಾತನಾಡಿ ಕೆಲವು ಮಕ್ಕಳಿಗೆ ಶ್ರವಣ ದೋಷ ಹುಟ್ಟಿನಿಂದ ಬರುತ್ತದೆ. ಕೆಲವು ಮಕ್ಕಳಿಗೆ ಹಲವು ಕಾರಣಗಳಿಂದ ಬರುತ್ತದೆ. ಯಾವುದೇ ಮಕ್ಕಳು ಶ್ರವಣ ದೋಷ ಸಮಸ್ಯೆಗೆ ಒಳಗಾಗಬಾರದು. ಶ್ರವಣ ದೋಷ ಇರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿ ಕಿವಿ ಕೇಳುವ ಹಾಗೆ ಮಾಡಬೇಕು. ನಾನು ಹಿಂದೆ 5 ವರ್ಷ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವನಾಗಿದ್ದೆ. ಆಗ ಹಲವು ಯೋಜನೆಗಳನ್ನು ಜಾರಿಗೆ ತರಲಾಯಿತು ಎಂದು ಮಾಹಿತಿ ನೀಡಿದರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ಮಾತನಾಡಿ ಶ್ರವಣ ದೋಷಕ್ಕೆ ತುತ್ತಾಗಿರುವುದು ಉತ್ತರ ಕರ್ನಾಟಕದ ಮಕ್ಕಳು ಹೆಚ್ಚು. ಈ ಬಗ್ಗೆ ಸಂಶೋಧನೆ ಮಾಡಬೇಕು. ಬುದ್ದಿ ಮಾಧ್ಯತೆ ಮಕ್ಕಳು ಹೆಚ್ಚುತ್ತಿರುವುದು ನಾವು ನೋಡುತ್ತಿದ್ದೇವೆ. ಈ ಬಗ್ಗೆ ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು. ನನಗೆ ದ್ವನಿ ಇಲ್ಲದ ಸಂದರ್ಭದಲ್ಲಿ ನಾನು ಸಹ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದು ಇಂದು ದ್ವನಿ ಪಡೆದು ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಸರ್ಕಾರ ಆರೋಗ್ಯ ಸುಧಾರಣೆಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆರೋಗ್ಯ ಸಮಸ್ಯೆ ಇರುವವರು ಸರ್ಕಾರದ ಆರೋಗ್ಯ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಫಲಾನುಭವಿ ಮಕ್ಕಳಿಗೆ ಶ್ರವಣ ಸಾಧನಗಳನ್ನು ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ಕೆ ಹರೀಶ್ ಗೌಡ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಡಾ. ನವೀನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ ಪುಷ್ಪಲತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕುಮಾರಸ್ವಾಮಿ, ಶ್ರವಣ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಶಂಕರ್ ಮಡಿಕೇರಿ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕರಾದ ಪುಷ್ಪವತಿ, ಮೈಸೂರು ವಿಭಾಗೀಯ ಸಹ ನಿರ್ದೇಶಕರಾದ ರಾಜೇಶ್ವರಿ ದೇವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ