ಪುದುಚೇರಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ವಿ.ವೈಥಿಲಿಂಗಂ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿ, ಕೇಂದ್ರಡಳಿತ ಪ್ರದೇಶವಾದ ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಕಾಂಗ್ರೆಸ್ ಮತ್ತು ಡಿಎಂಕೆ ಬದ್ಧವಾಗಿದೆ ಎಂದು ಹೇಳಿದರು.
ಪುದುಚೇರಿಯ ಮುಖ್ಯಮಂತ್ರಿ ಎನ್ ರಂಗಸ್ವಾಮಿ, ಕೇಂದ್ರ ಸರ್ಕಾರದ ವಶದಲ್ಲಿದ್ದಾರೆ. ದೊಡ್ಡ ರಾಜ್ಯಗಳ ಹಕ್ಕುಗಳಷ್ಟೇ ಅಲ್ಲ. ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶಗಳ ಹಕ್ಕುಗಳನ್ನೂ ರಕ್ಷಿಸಬೇಕಿದೆ ಎಂದರು.
10 ವರ್ಷಗಳ ಬಿಜೆಪಿ ಆಡಳಿತದಲ್ಲಿ ಪುದುಚೇರಿಗೆ ಏನೂ ದೊರಕಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದು.
ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಮೋದಿ ಕೊಡುಗೆ ಏನು ಎಂದು ಪ್ರಶ್ನಿಸಿದ ಸ್ಟಾಲಿನ್ ಕರೈಕಲ್ನ ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಶ್ರೀಲಂಕಾದಿಂದ ಬಂಧನಕ್ಕೊಳಗಾಗುತ್ತಿದ್ದಾರೆ. ಮೀನಗಾರರ ಸಂಕಷ್ಠ ನಿವಾರಣೆಗೆ ಏನು ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಇತ್ತೀಚೆಗೆ, ಪುದುಚೇರಿಯಲ್ಲಿ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ ನಡೆದಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ. ಮೋದಿ ಆಡಳಿತದಲ್ಲಿ ದೇಶದ ಮಹಿಳೆಯರಿಗೆ ರಕ್ಷೇ ಇಲ್ಲ ಎಂದು ಕಿಡಿಕಾರಿದ್ದಾರೆ.





