Mysore
24
haze

Social Media

ಸೋಮವಾರ, 02 ಮಾರ್ಚ್ 2026
Light
Dark

ಚಾ.ನಗರ: ಮೋದಿ ವಿರುದ್ಧ ಗೋ ಬ್ಯಾಕ್‌ ಚಳವಳಿ ನಡೆಸಿದ ಕಾಂಗ್ರೆಸ್

ಚಾಮರಾಜನಗರ: ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ವಂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬರುತ್ತಿರುವುದನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಗಳು ಮತ್ತು ಕಾರ್ಯಕರ್ತರು ಶನಿವಾರ ನಗರದಲ್ಲಿ ಗೋ ಬ್ಯಾಕ್‌ ಚಳವಳಿ ನಡೆಸಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮಾವೇಶಗೊಂಡ ಕಾಂಗ್ರೆಸ್‌ ಕಾರ್ಯಕರ್ತರು ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿ, ಮೋದಿ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಬರ ನಿರ್ವಹಣೆಗೆ ಕಳೆದ ಸೆಪ್ಟಂಬರ್‌ ತಿಂಗಳಿನಲ್ಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರ ಹಣ ನೀಡುವಂತೆ ಮನವಿ ಮಾಡಿದೆ. ಜೊತೆಗೆ ಕೇಂದ್ರದ ಸಚಿವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮನವಿ ಮಾಡಲಾಗಿದೆ. ಹಾಗಿದ್ದರೂ, ಕೇಂದ್ರ ರಾಜ್ಯಕ್ಕೆ ನಯಾಪೈಸೆ ನೀಡಿಲ್ಲ ಎಂದು ದೂರಿದರು.

ಕೇಂದ್ರದ ಬರ ಅಧ್ಯಯನ ತಂಡ ಅಕ್ಟೋಬರ್‌ನಲ್ಲಿ ರಾಜ್ಯಕ್ಕೆ ಭೇಟಿ ನೀಡಿ, ಅದೇ ತಿಂಗಳು 17,901 ಕೋಟಿ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. ಆದರೂ ಇಷ್ಟು ದಿನ ಸುಮ್ಮನಿರುವುದು ಏಕೆ ಎನ್ನುವುದು ಕನ್ನಡಿಗರ ಪ್ರಶ್ನೆಯಾಗಿದೆ, ಮೋದಿಯವರು ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಪ್ರವಾಹ, ಬರ ಬಂದಾಗ ಬಾರದ ಮೋದಿ ಚುನಾವಣೆ ಸಂದರ್ಭದಲ್ಲಿ ಮಾತ್ರ ಪ್ರಚಾರಕ್ಕೆ ಬರುತ್ತಿರುವುದು ದುರಂತ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಅಬ್ಬರದ ಪ್ರಚಾರಕ್ಕೆ ರಾಜ್ಯದ ಜನರು ತಕ್ಕ ಉತ್ತರ ನೀಡಿದ್ದಾರೆ. ಇದೀಗ ಮತ್ತೆ ಮೋದಿ ಬಂದಿದ್ದಾರೆ, ಬರ ಪರಹಾರ ನೀಡದೆ ರಾಜ್ಯಕ್ಕೆ ವಂಚಿಸಿರುವ ಬಿಜೆಪಿ ಮತ್ತು ಮೋದಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮರಿಸ್ವಾಮಿ ಹೇಳಿದರು.

Tags:
error: Content is protected !!