ಕೋಲಾರ: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರುಗಿ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪದೇ ಪದೇ ಮೈಸೂರು, ಚಾಮರಾಜನಗರಕ್ಕೆ ಬಂದು ಚುನಾವಣಾ ಪ್ರಚಾರ ಮಾಡುತ್ತಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದು, ಮೈಸೂರು, ಚಾಮರಾಜನಗರ ಗೆಲ್ಲದ್ದಿದ್ದರೆ ಸಿಎಂ ಸ್ಥಾನಕ್ಕೆ ಕಂಟಕವಾಗುತ್ತೆ ಎನ್ನುವ ಮಾತುಗಳು ಹರಿದಾಡುತ್ತಿದೆ.
ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನ ಶಿಷ್ಯ ಎಂದು ಗುರುತಿಸಿಕೊಂಡಿರುವ ಸಚಿವ ಬೈರತಿ ಸುರೇಶ್ ಸಹ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಇಂದು (ಏಪ್ರಿಲ್ 18) ಕೋಲಾರ ನಗರದಲ್ಲಿ ನಡೆದ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಸಚಿವ ಬೈರತಿ ಸುರೇಶ್ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ. ಹೀಗಾಗಿ ಕುರುಬ ಸಮುದಾಯ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಮೇಲಿರಲಿ. ಒಂದು ವೇಳೆ ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸಿಎಂ ಸೀಟಿಗೆ ಕಂಟಕವಾಗಿಲಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ಕಾಂಗ್ರೆಸ್ನಲ್ಲಿ ಬಾರಿ ಸಂಚಲನ ಮೂಡಿಸಿದೆ.