Mysore
26
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೇ ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಜುಲೈ.18ರವರೆಗೆ ದರ್ಶನ್‌ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್‌ ಹಾಗೂ ಇತರೆ ಕೊಲೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎ1 ಆರೋಪಿ ಪವಿತ್ರಾಗೌಡ ಪ್ರತ್ಯೇಕವಾಗಿ ಕೋರ್ಟ್‌ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್‌ ಜುಲೈ.18ರವರೆಗೆ ದರ್ಶನ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನೂ 14 ದಿನಗಳ ಕಾಲ ದರ್ಶನ್‌ ಜೈಲಿನಲ್ಲಿಯೇ ಇರಬೇಕಾಗಿದೆ.

ನಟ ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಲಾಗಿತ್ತು.

ರಾಜರಾಜೇಶ್ವರಿಯಲ್ಲಿರುವ ದರ್ಶನ್‌ ಮನೆಯಿಂದ ತುಸು ದೂರವೇ ಇರುವ ಶೆಡ್‌ನಲ್ಲಿಟ್ಟು ಚಿತ್ರಹಿಂಸೆ ನೀಡಲಾಗಿತ್ತು. ದರ್ಶನ್‌ ಅಂಡ್‌ ಗ್ಯಾಂಗ್‌ ರೇಣುಕಾಸ್ವಾಮಿಯನ್ನು ಮನಬಂದಂತೆ ಹಲ್ಲೆ ಮಾಡಿ, ಕರೆಂಟ್‌ ಶಾಕ್‌ ಕೊಟ್ಟು, ಕಬ್ಬಿಣದ ಸರಳಿನಿಂದ ಹೊಡೆದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾಗಿ ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದರ್ಶನ್‌ ಎ2 ಆರೋಪಿಯಾಗಿದ್ದು, ಪವಿತ್ರಾಗೌಡ ಎ1 ಆರೋಪಿ ಆಗಿದ್ದಾರೆ. ಇದೀಗ ಮತ್ತೆ ಡಿ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ.

 

Tags:
error: Content is protected !!