ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ನಿದ್ರೆಗೆ ಜಾರಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬೆಂಗಳೂರು ರಾಜ್ಯದ ಹಾಟ್ಸ್ಪಾಟ್ ಆಗಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ಹತೋಟಿಗೆ ತರಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಆದ್ರೂ ಆರೋಗ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅರ್ಧದಲ್ಲೇ ಅಭಿವೃದ್ಧಿ ಕೆಲಸಗಳು ನಿಂತುಹೋಗಿರುವ ಪರಿಣಾಮ ಅಲ್ಲಲ್ಲಿ ನೀರು ನಿಂತು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದರಿಂದಲೇ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ ಎಂದು ಕಿಡಿಕಾರಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಬೆಂಗಳೂರು ನಗರದಾದ್ಯಂತ ಸಚಿವರು ಹಾಗೂ ಶಾಸಕರು ಕ್ಷೇತ್ರಗಳಿಗೆ ಭೇಟಿ ಕೊಡಬೇಕು. ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಬೇಕು. ಸಮಸ್ಯೆ ಆಲಿಸಿ ಸೂಕ್ತ ಪರಿಹಾರ ಒದಗಿಸಬೇಕು. ಆಗ ಮಾತ್ರ ಡೆಂಗ್ಯೂ ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದರು.