ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಭಾರೀ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಪ್ರವಾಹದ ನೀರು ಆವರಿಸಿಕೊಂಡಿದೆ. ದೇವಸ್ಥಾನದ ಜೊತೆಗೆ ಅಕ್ಕಪಕ್ಕದ ಅಂಗಡಿಗಳು ಕೂಡ ಸಂಪೂರ್ಣ ಜಲಾವೃತವಾಗಿವೆ.
ದೇವಸ್ಥಾನದ ಸುತ್ತಾ ಪ್ರವಾಹದ ನೀರು ಆವರಿಸಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಪೂಜೆ ಮಾಡಲು ಕೂಡ ತೀವ್ರ ಸಮಸ್ಯೆ ಉಂಟಾಗಿದೆ. ಇನ್ನೂ ನಾಲ್ಕು ದಿನ ಮಳೆ ಮುಂದುವರಿಯಲಿದ್ದು, ಪ್ರವಾಹದ ನೀರು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಹೀಗಾಗಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಸೂಚನೆ ನೀಡಲಾಗಿದೆ.
ಭಾರೀ ಮಳೆಯಾಗುತ್ತಿರುವ ಪರಿಣಾಮ ಎತ್ತರ ಹಾಗೂ ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.





