Mysore
22
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಮಳೆಹಾನಿ| NDRF ನಿಯಮದ ಪ್ರಕಾರ ಪರಿಹಾರಕ್ಕೆ ವರದಿ ಸಲ್ಲಿಸಲು ಸಿಎಂ ಸೂಚನೆ

ಕಾರವಾರ: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ನಿಯಮದ ಪ್ರಕಾರ ಪರಿಹಾರ ಒಗದಿಸಲು ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಸೂಚನೆ ನೀಡಿದರು.

ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಭಾನುವಾರ(ಜು.21) ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಿದ ಸಿಎಂ ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ನೀಡಲಾಗಿರುವ ಪರಿಹಾರವನ್ನು ಉಳಿದವರಿಗೆ ತುರ್ತಾಗಿ ಕೊಡಬೇಕು ಎಂದರು‌.

ಕೋಸ್ಟಲ್ ಲೈನ್ ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್ ಗಳ ದುರಸ್ತಿ ಮತ್ತು ಬದಲಾವಣೆಗೆ ಸೂಚಿಸಿದರು.

ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಐ.ಆರ್.ಬಿ ಕಂಪನಿಯವರು ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ? ಇದು ಸರಿಯಿಲ್ಲ. 2016ಕ್ಕೆ ಕಾಮಗಾರಿ ಮುಕ್ತಾಯಗೊಳಿಸಬೇಕಿದ್ದರೂ ಸಹ ಇದುವರೆಗೆ ಮುಕ್ತಾಯಗೊಳಿಸದೇ ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ದಾರಿತಪ್ಪಿಸುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣವಾಗಿ ಪತ್ರ ಬರೆಯುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿರುವ ಅಪಾಯಕಾರಿ ಪ್ರದೇಶಗಳಲ್ಲಿನ ಗ್ರಾಮಗಳಲ್ಲಿ ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿಕೊಂಡು ಅಲ್ಲಿನ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಜನರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ನಿರ್ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಸತೀಶ್ ಸೈಲ್, ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ , ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!