Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ. ಪರಿಣಾಮ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಪ್ರವಾಸಿ ತಾಣದಲ್ಲಿ ಹೆಚ್ಚಿನ ಅಪಾಯವಿರುವ ಕಾರಣ ಅಲ್ಲಿಗೆ ನಿಷೇಧಾಜ್ಞೆ ಹೇರಲಾಗಿದೆ. ಸದ್ಯ ಮಳವಳ್ಳಿ ತಹಶೀಲ್ದಾರ್‌ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕಾವೇರಿ ನದಿ ತಟದಲ್ಲೇ ಇರುವ ಮುತ್ತತ್ತಿಯಲ್ಲಿ ಇತ್ತೀಚೆಗೆ ಹಲವರು ಮೃತಪಟ್ಟಿರುವ ಬಗ್ಗೆ ವರದಿಗಳಾಗಿವೆ. ಈ ಪ್ರವಾಸಿ ತಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಇನ್ನು ಕಾವೇರಿ ನದಿ ದಂಡೆಯಲ್ಲಿ ಬರುವ ಪ್ರವಾಸಿ ತಾಣಗಳಿಗೆ ಪೊಲೀಸ್‌ ಮತ್ತು ಗೃಹ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಕಾವೇರಿ ನದಿ ತನ್ನ ಆರ್ಭಟ ನಿಲ್ಲಿಸುವವರೆಗೂ ಕೂಡ ಮುತ್ತತ್ತಿ ಪ್ರವಾಸಿ ತಾಣಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದ್ದು, ಯಾರೂ ಕೂಡ ಕಾವೇರಿ ನದಿಯ ಹತ್ತಿರ ಸುಳಿಯದಂತೆ ನಿಷೇಧಾಜ್ಞೆ ಹೇರಲಾಗಿದೆ.

 

Tags:
error: Content is protected !!