Mysore
20
clear sky

Social Media

ಶನಿವಾರ, 14 ಫೆಬ್ರವರಿ 2026
Light
Dark

ಕೊಡಗಿಗೆ ಭೂಕುಸಿತದ ಭೀತಿ: ಸಾವಿರಾರು ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್ ನೀಡಿದ ಜಿಲ್ಲಾಡಳಿತ

ಮಡಿಕೇರಿ: ಜುಲೈ 30 ರ ಮಧ್ಯರಾತ್ರಿ ವಯನಾಡಿನ ಜನ ನೆಮ್ಮದಿಯಾಗಿ ನಿದ್ರಿಸಿದ್ದ ಸಮಯ ಅದು, ಆ ಕ್ಷಣ ದೊಡ್ಡ ಸ್ಫೋಟವೊಂದು ಕೇಳಿಸಿತ್ತು ಅಷ್ಟೆ. ಮತ್ತೆ ಯಾವ ಸುಳಿವನ್ನು ನೀಡದ ಪ್ರಕೃತಿ ಯಮ ಸ್ವರೂಪಿಯಾಗಿ ಮಾನವನ ಮೇಲೆ ಎರಗಿತು. ಈ ಭೀಕರ ಭೂಕುಸಿತ ನಾಗರೀಕ ಸಮಾಜಕ್ಕೆ ಎಚ್ಚರಿಕೆಯ ಸಂದೇಶವಾಗಿದೆ.

ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಹಾಗೂ ರಾಜ್ಯದ ಹಲವೆಡೆ ಸಂಭವಿಸಿದ ಗುಡ್ಡ ಕುಸಿತಗಳಿಂದ ಎಚ್ಚೆತ್ತುಕೊಂಡಿರುವ ಕೊಡಗು ಜಿಲ್ಲಾಡಳಿತ ಇದೀಗ ಸಂಭಾವ್ಯ ಭೂಕುಸಿತದ ಪ್ರದೇಶಗಳನ್ನು ಪಟ್ಟಿ ಮಾಡಿ, ಅಲ್ಲಿನ ಜನರ ಸ್ಥಾಳಾಂತರಕ್ಕೆ ಕ್ರಮ ಕೈಗೊಂಡು, ಸಾವಿರಾರು ಕುಟುಂಬಗಳಿಗೆ ಸ್ಥಳಾಂತರಕ್ಕೆ ನೋಟಿಸ್ ನೀಡಲಾಗಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಭಾರತೀಯ ಭೂಗರ್ಭ ಇಲಾಖೆಯು ಪಟ್ಟಿಯನ್ನು ಸಿದ್ದಪಡಿಸಿದ್ದು, ಈ ವರದಿಯನ್ನು ಆಧರಿಸಿ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಆಗಸ್ಟ್ ತಿಂಗಳು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ 2,995 ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್ ಜಾರಿಗೊಳಿಸಿದೆ.

ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರಿಸಬೇಕಾದ ಕುಟುಂಬಗಳನ್ನು ಜಿಲ್ಲಾಡಳಿತವು ಅಂತಿಮಗೊಳಿಸಿದ್ದು, ಶೀಘ್ರದಲ್ಲೇ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಆಗಬಹುದು ಎಂದು ಮೂಲಗಳು ಹೇಳಿವೆ.

ಸದ್ಯ ಜಿಲ್ಲಾಡಳಿತ 14 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದು, ಇಲ್ಲಿ 200 ಕ್ಕೂ ಹೆಚ್ಚು ಸಂತ್ರಸ್ತರು ಆಶ್ರಯ ಪಡೆದಿದ್ದಾರೆ. ಅಲ್ಲದೆ, ವಿಪತ್ತಿನ ಆತಂಕ ಎದುರಿಸುತ್ತಿರುವ ಪ್ರದೇಶಗಳಲ್ಲಿ 95 ಪರಿಹಾರ ಕೇಂದ್ರಗಳನ್ನು ತೆರೆಯಲು ಸ್ಥಳಗಳ ಪಟ್ಟಿ ಸಿದ್ದಪಡಿಸಲಾಗಿದೆ.

ಮಳೆಯ ಮುನ್ಸೂಚನೆಯನ್ನು ಆಧರಿಸಿ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳಿಂದ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಡಿಸಿ ವೆಂಕಟ್ ರಾಜಾ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈ ವರ್ಷ ಶೇ 24ರಷ್ಟು ಅಧಿಕ ಮಳೆಯಾಗಿದ್ದು, ‌ಪ್ರಸ್ತುತ ಆಗಸ್ಟ್ ತಿಂಗಳು ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

Tags:
error: Content is protected !!