Mysore
21
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ, ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್‌.ಅಶೋಕ

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದ ಕೋಮುಗಲಭೆ ವಿಚಾರದಲ್ಲಿ ಸರಿಯಾಗಿ ತನಿಖೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದೆ. ಜನರು ಹೇಳಿದ್ದನ್ನು ಕೇಳಿಯೇ ಹಾಗೆ ಟ್ವೀಟ್‌ ಮಾಡಿದ್ದೆ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದು ಸಚಿವರೇ ಹೇಳಿದ್ದರು. ಬಳಿಕ ಅದು ನಿಜ ಎಂದು ಸಾಬೀತಾಯಿತು. ಹಾಗಾದರೆ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ ಎಂದು ಪ್ರಶ್ನೆ ಮಾಡಿದರು.

ವಿರೋಧ ಪಕ್ಷದ ನಾಯಕನಾಗಿ ತನಿಖೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೇನೆ. ಸರ್ಕಾರದಿಂದ ನನ್ನ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ವಿರೋಧ ಪಕ್ಷವನ್ನು ಬಗ್ಗುಬಡಿಯಬೇಕೆಂದು ಸರ್ಕಾರ ನಿರ್ಧಾರ ಮಾಡಿದೆ. ಪಾಕ್‌ ಜಿಂದಾಬಾದ್‌ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಸಚಿವರು ರಾಜೀನಾಮೆ ನೀಡಬೇಕಿತ್ತು. ಹಾಗಾದರೆ ವಿರೋಧ ಪಕ್ಷವಾಗಿ ನಾವು ಏನು ಮಾಡಬೇಕು? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಲು ಮುಂದಾಗಿದೆ. ಆದರೆ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಪೊಲೀಸರನ್ನು ಬೊಂಬೆಯಂತೆ ಆಡಿಸುತ್ತಿದ್ದಾರೆ. ಈ ಸರ್ಕಾರ ರಾಜ್ಯಪಾಲರನ್ನೂ ಬಿಟ್ಟಿಲ್ಲ. ಅವರ ಮೇಲೂ ಗದಾ ಪ್ರಹಾರ ಮಾಡಲಾಗುತ್ತಿದೆ. ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರ ಅಧಿಕಾರ ಕಸಿಯಲು ಸರ್ಕಾರ ಮುಂದಾಗಿದೆ. ನಾವು ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಮಾಡಿದ್ದೆವು. ಹೀಗಾಗಿ ಈ ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ ಎಂದರು.

Tags:
error: Content is protected !!