ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ದೂರವಿಲ್ಲ. ಅವರು ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದು ಬೆಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು. ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ನಿರಂತರವಾಗಿ ಹೋರಾಟ ನಡೆಸುತ್ತಿವೆ. ಮುಡಾ ಮತ್ತು
ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣಗಳ ಪಾರದರ್ಶಕ ತನಿಖೆಯ ದೃಷ್ಟಿಯಿಂದಾದರೂ ಸಿಎಂ ಹುದ್ದೆಗೆ ರಾಜೀನಾಮೆ ನೀಸಲೇಬೇಕು. ಅದನ್ನು ಬಿಟ್ಟು ಸಿದ್ದರಾಮಯ್ಯ ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳುವುದು ಸರಿಯಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಮೇಲೆ ಅರಾಜಕತೆ ಸೃಷ್ಟಿಯಾಗಿ ಅಭಿವೃದ್ಧಿ ಕಾರ್ಯಗಳೇ ಸ್ಥಗಿತವಾಗಿವೆ. ಇವೆಲ್ಲವಕ್ಕೂ ಮೂಲ ಕಾರಣ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ. ಈ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಕಿಡಿಕಾರಿದರು.