Mysore
28
overcast clouds

Social Media

ಶನಿವಾರ, 08 ಆಗಸ್ಟ್ 2026
Light
Dark

ಸರ್ಕಾರದಲ್ಲಿ ಎಲ್ಲರೂ ಭ್ರಷ್ಟರಾದರೆ ಶಾಸಕ ಸತೀಶ್‌ ಸೈಲ್‌ರ ಸ್ಥಿತಿ ಎದುರಾಗಲಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಸ್‌ ಸೈಲ್‌ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಸರ್ಕಾರದಲ್ಲಿ ಎಲ್ಲರೂ ಭ್ರಷ್ಟರಾದರೆ ಶಾಸಕ ಸತೀಶ್‌ ಸೈಲ್‌ರ ಸ್ಥಿತಿ ಎದುರಾಗಲಿದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.

ಈ ವಿಚಾರವಾಗಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎನ್ನುವುದನ್ನು ನಿರೂಪಿಸಿದೆ. ಈ ತೀರ್ಪು ಮುಡಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಂತಹ ಲೂಟಿಕೋರತನ ಹಾಗೂ ಭ್ರಷ್ಟತೆಯ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ ಎಂದಿದ್ದಾರೆ.

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ₹200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಸತೀಶ್ ಸೈಲ್ ಅವರ ವಿರುದ್ಧ ಬಂದಿರುವ ತೀರ್ಪು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ರವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದು ತಿಳಿಸಿದ್ದಾರೆ.

ಮುಡಾ ಹಗರಣದ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌ನ ಸುದೀರ್ಘ ತೀರ್ಪಿನಲ್ಲಿ ಹಗರಣದ ಕುರಿತಾದ ಉಲ್ಲೇಖಗಳು ಸ್ಪಷ್ಟವಾಗಿ ನಮೂದಾಗಿವೆ. ಈ ನಿಟ್ಟಿನಲ್ಲಿ ಇಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ. ಹೀಗಾಗಿಯೂ ಭಂಡತನ ಮೆರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಸತೀಶ್ ಸೈಲ್ ವಿರುದ್ಧದ ತೀರ್ಪಿನಿಂದಾದರೂ ಎಚ್ಚೆತ್ತುಕೊಂಡು ನೈತಿಕತೆ ಮೆರೆದರೆ ಭವಿಷ್ಯತ್ತಿನಲ್ಲಿ ಅವರು ಕಿಂಚಿತ್ತಾದರೂ ಗೌರವ ಉಳಿಸಿಕೊಳ್ಳಬಹುದು. ಇಲ್ಲದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಸತೀಶ್ ಸೈಲ್ ಪ್ರಕರಣದ ತೀರ್ಪು ತಿಳಿಸಿಕೊಟ್ಟಿದೆ ಎಂದು ಹೇಳಿದ್ದಾರೆ.

Tags:
error: Content is protected !!