Mysore
28
broken clouds

Social Media

ಗುರುವಾರ, 09 ಏಪ್ರಿಲ 2026
Light
Dark

57 ವರ್ಷಗಳ ನಂತರ ಖಾಸಗಿ ಕೃಷಿ ಕಾಲೇಜು ಸ್ಥಾಪನೆ: ಚಲುವರಾಯಸ್ವಾಮಿ

ಮಂಡ್ಯ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್  ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ ಕೃಷಿ ಕಾಲೇಜು ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದಲ್ಲಿರುವ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಇಂದು(ಡಿ.2) ಆಯೋಜಿಸಲಾಗಿದ್ದ ನೂತನ ಕೃಷಿ ಮಹಾವಿದ್ಯಾಲಯ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕೃಷಿ ಶಿಕ್ಷಣ ನೀಡಲು ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆ ಮುಂದೆ ಬಂದಿರುವುದು ಮೌಲ್ಯಯುತ ಶಿಕ್ಷಣ ನೀಡುವುದಕ್ಕೆ ಸಹಕಾರಿಯಾಗಲಿದೆ ಎಂದಿದ್ದಾರೆ.

ನಮ್ಮ ರಾಜ್ಯದಲ್ಲಿ 2013ರಿಂದ ಎಲ್ಲಾ 6 ಕೃಷಿ, ತೋಟಗಾರಿಕೆ ಮತ್ತು ಪಶುಸಂಶೋಧನಾ ವಿಶ್ವವಿದ್ಯಾಲಯಗಳಿಗೆ, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಂತೆ ಸಿಇಟಿ ಮುಖಾಂತರ ಮೆರಿಟ್ ಆಧಾರದ ಮೇರೆಗೆ ಸೀಟುಗಳನ್ನು ಒದಗಿಸಲು ಆರಂಭಿಸಲಾಯಿತು. ಅಂದಿನಿಂದ ಇಂದಿನವರೆಗೂ ಕೃಷಿ ಸ್ನಾತಕ ಪದವಿಯನ್ನು ಕಲಿಯಲು ಇಚ್ಚಿಸುವ ವಿದ್ಯಾರ್ಥಿಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ 23 ಸಾವಿರದಿಂದ ಪ್ರಸ್ತುತ ವರ್ಷಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿಯಲ್ಲಿ ಕೃಷಿ ಶಿಕ್ಷಣಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ 6 ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಪದವಿಗೆ ಕೇವಲ 5000 ಸೀಟುಗಳನ್ನು ತುಂಬಲು ಅವಕಾಶವಿದೆ. ಆದರೆ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಕೃಷಿ ಶಿಕ್ಷಣವನ್ನು ವ್ಯಾಸಂಗ ಮಾಡಲು ಅಪೇಕ್ಷಿಸುತ್ತಿರುವುದರಿಂದ ಸಾಮಾಜಿಕ ನ್ಯಾಯವನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿರುವ ಹಿನ್ನಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೃಷಿ ವಿಜ್ಞಾನ ಕಾಲೇಜು ಆರಂಭಿಸಲು ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Tags:
error: Content is protected !!