Mysore
34
few clouds

Social Media

ಗುರುವಾರ, 09 ಏಪ್ರಿಲ 2026
Light
Dark

ಹುಬ್ಬಳ್ಳಿಯಲ್ಲಿ ಸಿಲಿಂಡರ್‌ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಇಂದು ಮೃತಪಟ್ಟಿದ್ದಾರೆ.

ಪ್ರಕಾಶ ಬಾರಕೇರ(42) ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್‌ ನಿವಾಸಿಯಾಗಿದ್ದಾರೆ.

ಘಟನೆ ನಡೆದು ಇಲ್ಲಿಯ ತನಕ 8 ಮಂದಿ ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಪ್ರಕಾಶ್‌ ಬಾರಕೇರ ಅವರ ಮಗ ವಿನಾಯಕ್‌ಗೆ ಕಿಮ್ಸ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿಸೆಂಬರ್.‌23ರಂದು ಬೆಳಗಿನ ಜಾವ ಹುಬ್ಬಳ್ಳಿಯ ಉಣಕಲ್‌ ಅಚ್ಚವ್ವ ಕಾಲೋನಿಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಸಂಭವಿಸಿತ್ತು. ಎಂದಿನಂತೆ ಅಯ್ಯಪ್ಪ ಮಾಲಾಧಾರಿಗಳು ಪೂಜೆ ಸಲ್ಲಿಸಿ ನಿದ್ರೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್‌ ಸಿಲಿಂಡರ್‌ಗೆ ತಾಗಿದ ಪರಿಣಾಮ ಗ್ಯಾಸ್‌ ಸೋರಿಕೆಯಾಗಿತ್ತು. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಕಿಮ್ಸ್‌ ಆಸ್ಪತ್ರೆಗೆ ರವಾನಿಸಿದ್ದರು.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 9 ಜನ ಮಾಲಾಧಾರಿಗಳ ಪೈಕಿ ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

Tags:
error: Content is protected !!