Mysore
32
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

ಓದುಗರ ಪತ್ರ: ಖಾಲಿ ಹುದ್ದೆಗಳು ಶೀಘ್ರ ಭರ್ತಿಯಾಗಲಿ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು ೨.೭೬ ಲಕ್ಷ ಹುದ್ದೆಗಳು ಖಾಲಿ ಉಳಿದಿವೆ ಎಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದ್ದು, ಯುವಕರಿಗೆ ಆತಂಕ ಮೂಡಿಸಿದೆ. ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅಧಿಕಾರಕ್ಕೆ ಬರುವ ಎಲ್ಲ ಸರ್ಕಾರಗಳೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುತ್ತೇವೆ ಎನ್ನುತ್ತವೆ. ಆದರೆ ಖಾಲಿ ಹುದ್ದೆಗಳ ಭರ್ತಿಗೆ ಮುಂದಾಗುವುದಿಲ್ಲ.

ರಾಜ್ಯದಲ್ಲಿ ೨.೭೬ ಲಕ್ಷ ಹುದ್ದೆಗಳು ಖಾಲಿ ಇದ್ದು, ೨೬,೧೬೮ ಹುದ್ದೆಗಳು ಒಳಾಡಳಿತ ಇಲಾಖೆಯಲ್ಲಿಯೇ ಖಾಲಿ ಇದ್ದರೂ ಸರ್ಕಾರ ಅವುಗಳ ಭರ್ತಿಗೆ ಮುಂದಾಗದಿರುವುದು ಸರ್ಕಾರದ ಬೇಜವಾಬ್ದಾರಿಯೇ ಸರಿ. ಕೃಷಿ ಇಲಾಖೆ, ಅರಣ್ಯ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ, ಆರ್ಥಿಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಲ್ಲಿಯೂ ನೂರಾರು ಹುದ್ದೆಗಳು ಖಾಲಿ ಇವೆ. ವಿದ್ಯಾಭ್ಯಾಸ ಮುಗಿದ ಬಳಿಕ ಅನೇಕ ಯುವಕರು ಸರ್ಕಾರಿ ಕೆಲಸ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ. ಒಂದೆಡೆ ಉದ್ಯೋಗ ಸಿಗುತ್ತಿಲ್ಲ ಎಂಬ ಬೇಸರವಿದ್ದರೆ ಮತ್ತೊಂದೆಡೆ ವಯೋಮಿತಿ ಮೀರುತ್ತಿದೆ ಎಂಬ ಆತಂಕವಿದೆ.

ಹೀಗಿರುವಾಗ ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡುವುದನ್ನು ಬಿಟ್ಟು, ಆ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೌಕರರನ್ನು ನೇಮಕ ಮಾಡಿಕೊಳ್ಳುವುದು ಎಷ್ಟು ಸರಿ? ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ಮುಂದಿನ ಒಂದು ವರ್ಷದೊಳಗೆ ಖಾಲಿ ಇರುವ ಎಲ್ಲ ಹುದ್ದೆಗಳನ್ನೂ ಭರ್ತಿ ಮಾಡಬೇಕು.

-ಪ್ರಸನ್ನ ಕುಮಾರ್, ಉಪನ್ಯಾಸಕ, ಎಚ್.ಡಿ.ಕೋಟೆ ತಾ

Tags:
error: Content is protected !!