Mysore
19
few clouds

Social Media

ಶನಿವಾರ, 24 ಜನವರಿ 2026
Light
Dark

ಕಾಂಗ್ರೆಸ್‌ ಸರ್ಕಾರದ ಆರ್ಥಿಕ ದುರಾಡಳಿತಕ್ಕೆ ರಾಜ್ಯ ಶಿಕ್ಷಣ ವ್ಯವಸ್ಥೆ ಗುರಿಯಾಗುತ್ತಿದೆ: ಸಂಸದ ಯದುವೀರ್‌

ಮೈಸೂರು: ಕಾಂಗ್ರೆಸ್ ಸರ್ಕಾರದ ಆರ್ಥಿಕ ದುರಾಡಳಿತಕ್ಕೆ ಈಗಿನ ರಾಜ್ಯ ಶಿಕ್ಷಣ ವ್ಯವಸ್ಥೆಯು ಗುರಿಯಾಗುತ್ತಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ ಸಮಿತಿಯು ಆರ್ಥಿಕ ನಿರ್ಬಂಧಗಳನ್ನು ಉಲ್ಲೇಖಿಸಿ ಹೊಸದಾಗಿ ಸ್ಥಾಪಿಸಲಾದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಶಿಫಾರಸು ಮಾಡಿದೆ. ಇದೇ ವೇಳೆ ಕಾಂಗ್ರೆಸ್ ವಾರ್ಷಿಕವಾಗಿ 50,000 ಕೋಟಿ ರೂ.ಗಳನ್ನು ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಇತರ ವಿವಿಧ ಪ್ರಚಾರ ಕಾರ್ಯಕ್ರಮಗಳಿಗೆ ಅದ್ದೂರಿಯಾಗಿ ಖರ್ಚು ಮಾಡಲು ಆದ್ಯತೆ ನೀಡುತ್ತಿದೆ. ಆದರೆ ಈ ವಿಶ್ವವಿದ್ಯಾಲಯಗಳನ್ನು ಉಳಿಸಿಕೊಳ್ಳಲು ಐದು ವರ್ಷಗಳಲ್ಲಿ ಸುಮಾರು 350 ಕೋಟಿ ರೂ.ಗಳನ್ನು ಖರ್ಚು ಮಾಡುವುದು ಸರ್ಕಾರಕ್ಕೆ ಕಷ್ಟಕರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಣಮಟ್ಟದ ಶಿಕ್ಷಣದೊಂದಿಗೆ ಜನರನ್ನು ಸಬಲೀಕರಣಗೊಳಿಸುವ ಬದಲು, ಕಾಂಗ್ರೆಸ್ ಸರ್ಕಾರವು ಭವಿಷ್ಯದ ಪೀಳಿಗೆಯ ಶಿಕ್ಷಣಕ್ಕೆ ಅಡೆತಡೆಗಳನ್ನು ತಂದು ಒತ್ತಡ ಸೃಷ್ಟಿಸಲು ಮುಂದಾಗುತ್ತಿದೆ. ರಾಜ್ಯ ಸರ್ಕಾರ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯಲು ಗ್ಯಾರೆಂಟಿ ಯೋಜನೆಗಳನ್ನು ರೂಪಿಸಿದ್ದರೂ, ಅದು ಕರ್ನಾಟಕದ ಮೂಲಭೂತ ಸಂಸ್ಥೆಗಳನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ಅಲ್ಲದೇ ಅದು ಶಿಕ್ಷಣ, ಆರೋಗ್ಯˌ ರಕ್ಷಣೆ ಅಥವಾ ಮೂಲಸೌಕರ್ಯವಾಗಿರಬಹುದು. ಅವರ ಈ ಅವ್ಯವಸ್ಥಿತ ಜಾರಿಗೆಯಿಂದ ಸಾವಿರಾರು ಗ್ರಾಮೀಣ, ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳು ಕೈ ತಪ್ಪಿಹೋಗುವಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ವಿಶ್ವವಿದ್ಯಾಲಯಗಳಲ್ಲಿ ನಿರ್ವಹಣೆ ಮತ್ತು ಪ್ರಮುಖ ಸಮಸ್ಯೆಗಳಿದ್ದುˌ ಅವುಗಳನ್ನು ಬಗೆಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ವಿವಿಗಳನ್ನು ಅಭಿವೃದ್ದಿಗೊಳಿಸಿ ಬಲ ಪಡಿಸಬೇಕೇ ಹೊರತು ಅವುಗಳನ್ನು ಸಂಪೂರ್ಣವಾಗಿ ಮುಚ್ಚಬಾರದು. ಅವುಗಳನ್ನು ಮುಚ್ಚುವುದು ಪರಿಹಾರವಲ್ಲ. ಸರ್ಕಾರದ ಈ ನಿರ್ಧಾರ ತನ್ನ ಮೂಲ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದಾಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರದ ಈ ನಿರ್ಧಾರಗಳಿಂದ ಕೊಡಗಿನಂತಹ ಪ್ರದೇಶಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಆರಂಭವಾಗಿದ್ದ ವಿಶ್ವವಿದ್ಯಾಲಯವನ್ನು ಇದೀಗ ರಾಜ್ಯ ಸರ್ಕಾರ ಬೇರೆ ವಿವಿಗಳ ಜೊತೆ ವಿಲೀನಗೊಳಿಸುವ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣದ ಆಕಾಂಕ್ಷಿಗಳಿಗೆ ದೊಡ್ಡ ಪೆಟ್ಟು ಕೊಟ್ಟಂತಾಗುತ್ತದೆ. ಇಲ್ಲಿನ ವಿದ್ಯಾರ್ಥಿಗಳಿಗೆ ಕೊಡಗಿನಿಂದ ದೂರದ ನಗರಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕೆ ಅವಲಂಬಿತರಾಗುವ ಸ್ಥಿತಿ ಸರ್ಕಾರ ತರಬಾರದು ಎಂದು ಆಗ್ರಹಿಸಿದ್ದಾರೆ.

Tags:
error: Content is protected !!