Mysore
18
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ಜಾತಿ ಗಣತಿ ವರದಿ ಜಾರಿಗೊಳಿಸುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ ಅದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಸರ್ಕಾರ ಜಾತಿ ಗಣತಿ ಪರವಾಗಿದೆ. ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ.‌ ಮುಂದಿನ ದಿನಗಳಲ್ಲಿ ಅದನ್ನು ಖಂಡಿತವಾಗಿಯೂ ಜಾರಿ ಮಾಡಲಾಗುತ್ತದೆ. ಅದರ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು.

ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು, ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿ ಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.

ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಎಲ್ಲರನ್ನೂ ಮುಖ್ಯ ವಾಹಿನಿಗೆ ತರುವುದು ನಮ್ಮ ಸರ್ಕಾರದ ಉದ್ದೇಶ. ಅಸಮಾನತೆ ಹೋಗಬೇಕು ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹುಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿದೆ. ತಳ ಸಮುದಾಯವಿರಲಿ, ಮೇಲ್ವರ್ಗವಿರಲಿ ಎಲ್ಲರಿಗೂ ಸಮಾನತೆ ಇರಬೇಕು ಎಂಬ ಅಂಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎಂದು ಹೇಳಿದರು.

Tags:
error: Content is protected !!