Mysore
23
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ರಾಜ್ಯ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿ

R Ashok

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್‌ ಸರ್ಕಾರವನ್ನು ಕೂಡ ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದರು.

ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್‌ ಬಹಳ ಚಿಂತೆಯಲ್ಲಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

Tags:
error: Content is protected !!