ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಲು ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿರುವ ಅರಣ್ಯಾಧಿಕಾರಿಗಳು, ಹೆಣ್ಣು ಆನೆಗಳ ಗರ್ಭಾಧಾರಣೆಯ ಪರೀಕ್ಷೆಗಾಗಿ ಸ್ಯಾಂಪಲ್ಸ್ಗಳನ್ನು ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸುತ್ತಿದ್ದಾರೆ.
ಲ್ಯಾಬ್ನಿಂದ ಪರೀಕ್ಷಾ ವರದಿ ಬಂದ ನಂತರ ಆನೆಗಳ ತಾತ್ಕಾಲಿಕ ಪಟ್ಟಿಯನ್ನು ತಯಾರಿಸಿ ಸಂಬಂಧಪಟ್ಟ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ.
ಸರ್ಕಾರದಿಂದ ಅನುಮೋದನೆಗೊಂಡ ಆನೆಗಳ ಆಯ್ಕೆ ಪಟ್ಟಿಯನ್ನು ತದನಂತರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಅರಣ್ಯ ಇಲಾಖೆಯಿಂದ ಜಂಬೂಸವಾರಿಯಲ್ಲಿ ಭಾಗವಹಿಸುವ ಇಲಾಖೆ ಆನೆಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಲಿದ್ದಾರೆ.
ಪ್ರಸ್ತುತ ಆನೆಗಳ ಆರೋಗ್ಯ ತಪಾಸಣೆ ಕಾರ್ಯ ಪ್ರಗತಿಯಲ್ಲಿದ್ದು, ಜುಲೈ.20ರ ನಂತರ ಆನೆಗಳ ಆಯ್ಕೆಪಟ್ಟಿಯ ಪ್ರಕಟಣೆಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳಲಾಗುತ್ತದೆ.





