Mysore
27
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಗ್ಯಾರಂಟಿಗಳಿಂದಲೇ ರಾಜ್ಯ ತಲಾ ಆದಾಯದಲ್ಲಿ ನಂಬರ್ ಒನ್ ಇದೆ : ಸಿ.ಎಂ

Siddaramaiah

ಅರಸೀಕೆರೆ : ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು ಭರವಸೆ ವ್ಯಕ್ತಪಡಿಸಿದರು.

148 ಕೋಟಿ ವೆಚ್ಚದಲ್ಲಿ 10 ಕೆರೆಗಳನ್ನು ತುಂಬಿಸುವ, ಕುಡಿಯುವ ನೀರು ಕೊಡುವ ಪುಣ್ಯದ ಕೆಲಸವನ್ನು ಶಿವಲಿಂಗೇಗೌಡರು ಮಾಡಿದ್ದಾರೆ ಎಂದು ವಿವರಿಸಿದರು.

ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡಿ ದೇಶದಲ್ಲಿ ನಂಬರ್ ಒನ್ ಆಗಿದೆ. ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದು. ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥ ಆಗೋದಿಲ್ಲ. ಅದಕ್ಕೇ ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು, ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುವ ಯತ್ನ ಮಾಡಿದರೂ ರಾಜ್ಯದ ಜನತೆ ಯಾಮಾರುವುದಿಲ್ಲ ಎಂದರು.

ಸರ್ಕಾರದ ಸಾಧನಾ ಸಮಾವೇಶದಲ್ಲಿ ಲಕ್ಷ ಲಕ್ಷ ಜನ ಫಲಾನುಭವಿಗಳು ಸೇರಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದು ನುಡಿದಂತೆ ನಡೆದ ನಮ್ಮ ಸರ್ಕಾರದ ಸಾಧನೆ ಎಂದರು.

ನಾವು ಅಭಿವೃದ್ಧಿ ಯೋಜನೆಗಳಿಗೆ 1.20 ಲಕ್ಷ ಕೋಟಿ ಖರ್ಚು ಮಾಡುವುದರ ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಖರ್ಚು ಮಾಡಿ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿದ್ದೇವೆ ಎಂದು ವಿವರಿಸಿದರು.

Tags:
error: Content is protected !!