ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಐತಿಹಾಸಿಕ ತೀರ್ಪು, ಪೊಲೀಸ್ ಇಲಾಖೆಗೆ ಕೀರ್ತಿ ಬಂದಂತಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೊಂದು ಐತಿಹಾಸಿಕ ತೀರ್ಪು, ಪೊಲೀಸ್ ಇಲಾಖೆಗೂ ಕೀರ್ತಿ ಬಂದಂತಾಗಿದೆ. ಶೀಘ್ರದಲ್ಲೇ ತನಿಖೆ ನಡೆಸಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಹೊರಬಿದ್ದಿದೆ. ಆದ್ದರಿಂದ ಸಿಐಡಿ ಎಸ್ಐಟಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇನ್ನು ಇಂತಹ ಪ್ರಕರಣಗಳಲ್ಲಿ ವಿಚಾರಣೆ ವರ್ಷಾನುಗಟ್ಟಲೇ ನಡೆಯುತ್ತಲೇ ಇರುತ್ತದೆ. ಆದರೆ ನಮ್ಮ ಪೊಲೀಸರು ಅಚ್ಚುಕಟ್ಟಾಗಿ ಹಾಗೂ ಸಮರ್ಪಕವಾಗಿ ತನಿಖೆ ನಡೆಸಿ ಒಂದು ವರ್ಷ ನಾಲ್ಕು ತಿಂಗಳಲ್ಲಿ ಕೋರ್ಟ್ ತೀರ್ಪು ನೀಡುವಂತೆ ಮಾಡಿದ್ದಾರೆ. ನ್ಯಾಯಾಲಯಕ್ಕೆ ಎಸ್ಐಟಿ ಎಲ್ಲಾ ದಾಖಲೆಗಳನ್ನು ಸಲ್ಲಿಸಿ, ತನಿಖೆ ವೇಗವಾಗಿ ಮುಗಿಸಿದ್ದಾರೆ. ಹೀಗಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಕೇಸನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತದೆ. ತನಿಖೆ ನಡೆಸಿದ ವಿಶೇಷ ತಂಡಕ್ಕೆ ಸಿಎಂ ಪದಕ ನೀಡಲಾಗುವುದು. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ಹೇಳಿದರು.





